ಹುಬ್ಬಳ್ಳಿ: ‘ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಇನ್ನೂ ಜೀವಂತವಾಗಿದೆ. ಸದ್ಯ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದೇ ತಟಸ್ಥವಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪುರೆ ತಿಳಿಸಿದರು.
‘ಹಾವೇರಿ ಜಿಲ್ಲೆ ಕಾಗಿನೆಲೆಯಲ್ಲಿ ಮಂಗಳವಾರ (ಏ.3) ಹಮ್ಮಿಕೊಂಡಿರುವ, ಬಿಜೆಪಿ ಹಿಂದುಳಿದ ವರ್ಗದವರ ಸಮಾವೇಶಕ್ಕೂ ರಾಯಣ್ಣ ಬ್ರಿಗೇಡ್ಗೂ ಯಾವುದೇ ಸಂಬಂಧ ಇಲ್ಲ. ಇದು ಪಕ್ಷಾತೀತ ಸಂಘಟನೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಬಿಜೆಪಿ ರಾಷ್ಟ್ರೀಯ ಘಟಕ ಅಧ್ಯಕ್ಷ ಅಮಿತ್ ಶಾ ಅವರು ಕಾಗಿನೆಲೆಯ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂದು ಕೆಲವರು ಸುಳ್ಳು ಸುದ್ದಿ ಹರಡಿದ್ದಾರೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ರಾಜ್ಯದ ವಿವಿಧೆಡೆಯಿಂದ ಜನರು ಬರಲಿದ್ದಾರೆ’ ಎಂದು ಸ್ಪಷ್ಟಪಡಿಸಿದರು.
ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಮಾತನಾಡಿ, ‘ನಾನು ಸಿಂಧನೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಟಿಕೆಟ್ ಸಿಗುವ ಸಾಧ್ಯತೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.