ನವದೆಹಲಿ: ದೇಶದಲ್ಲಿ ಸುಲಲಿತ ವಾಣಿಜ್ಯ ವಹಿವಾಟು ನಡೆಸಲು ಇರುವ ಅಡೆತಡೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರವು ರಾಜ್ಯಗಳ ಜೊತೆಗೂಡಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ.
ಸುಲಲಿತ ವಹಿವಾಟಿಗೆ ಉತ್ತೇಜನ ನೀಡುವ ಸಲುವಾಗಿ ಪರವಾನಗಿ ಅಗತ್ಯವನ್ನು ಕಡಿಮೆ ಮಾಡುವುದು ಹಾಗೂ ನವೀಕರಣ ಪ್ರಕ್ರಿಯೆ ಸರಳಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಆಯೋಜಿಸಿದ್ದ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ವಾಣಿಜ್ಯ ವಿವಾದಗಳಂತಹ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಲು ಉದ್ಯಮ ಮತ್ತು ಸರ್ಕಾರ ಒಟ್ಟಾಗಿ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ.
ರಫ್ತು ಹೆಚ್ಚಿಸಲು ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲ ಆಗುವಂತೆ ಉತ್ತಮ ವಿನ್ಯಾಸದ ಜೊತೆಗೆ ವೈವಿಧ್ಯಮಯ ಉತ್ಪನ್ನಗಳನ್ನು ರಫ್ತು ಮಾಡುವುದರತ್ತ ಗಮನ ಹರಿಸುವಂತೆ ಗೋಯಲ್ ಅವರು ಹರಳು ಮತ್ತು ಚಿನ್ನಾಭರಣ ಉದ್ಯಮಕ್ಕೆ ಸೂಚನೆ ನೀಡಿದ್ದಾರೆ.