ನವದೆಹಲಿ: ಕ್ರಿಪ್ಟೊಕರೆನ್ಸಿಗಳಿಗೆ ಸಂಬಂಧಿಸಿದ ಸಮಾಲೋಚನಾ ಪತ್ರವು ಸಿದ್ಧವಾಗಿದ್ದು ಅದನ್ನು ಶೀಘ್ರದಲ್ಲಿಯೇ ಸಲ್ಲಿಸಲಾಗುತ್ತದೆ ಎಂದು ಕೇಂದ್ರ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಅಜಯ್ ಸೇಠ್ ಹೇಳಿದ್ದಾರೆ.
ಸಮಾಲೋಚನಾ ಪತ್ರ ಸಿದ್ಧಪಡಿಸಲು ವ್ಯಾಪಕವಾಗಿ ಚರ್ಚೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. ಕ್ರಿಪ್ಟೊಕರೆನ್ಸಿಗಳು ಸೃಷ್ಟಿಸಿರುವ ಸವಾಲನ್ನು ಎದುರಿಸಲು ಜಾಗತಿಕ ಮಟ್ಟದಲ್ಲಿ ಕೆಲಸ ಆಗಬೇಕು ಎಂದೂ ಅವರು ತಿಳಿಸಿದ್ದಾರೆ.
ಸವಾಲಿನ ಪರಿಸ್ಥಿತಿ ಇದ್ದರೂ ಭಾರತದ ಅರ್ಥ ವ್ಯವಸ್ಥೆಯು ವಿಶ್ವದ ಅತಿದೊಡ್ಡ ಅರ್ಥ ವ್ಯವಸ್ಥೆಗಳ ಪೈಕಿ ಅತ್ಯಂತ ವೇಗವಾಗಿ ಬೆಳವಣಿಗೆ ಕಾಣಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.