ದೇವನಹಳ್ಳಿ: ಪ್ರಸ್ತುತ ತಾಲ್ಲೂಕಿನಲ್ಲಿ ಈಗಾಗಲೇ ಹದಿನಾಲ್ಕು ಸರ್ಕಾರಿ ಶಾಲೆಗಳು ಅತ್ಯಾಧುನಿಕ ಸೌಲಭ್ಯವುಳ್ಳ ಶಾಲೆಗಳಾಗಿ ಪರಿವರ್ತನೆಯಾಗಿದ್ದು, ಐದು ವರ್ಷಗಳಲ್ಲಿ ಎಲ್ಲಾ ಸರ್ಕಾರಿ ಶಾಲೆಗಳನ್ನು ಪರಿವರ್ತಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮಿನಾರಾಯಣ ತಿಳಿಸಿದರು.
ಬಿದಲೂರು ಗ್ರಾಮದಲ್ಲಿ ಶುಕ್ರವಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಸಂಸ್ಥೆ ವತಿಯಿಂದ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದಡಿ ₹60 ಲಕ್ಷ ವೆಚ್ಚದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಗುಣಮಟ್ಟದ ಕಟ್ಟಡ, ಕಂಪ್ಯೂಟರ್, ಆಸನಗಳು, ರಂಗಮಂದಿರ, ವಾಚನಾಲಯ, ಮಕ್ಕಳಿಗೆ ಪಠ್ಯ, ಪಠ್ಯೇತರ ಶೈಕ್ಷಣಿಕ ಪರಿಕರ, ಆಧುನಿಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.
ಖಾಸಗಿ ಶಾಲೆಗಳಲ್ಲಿ ಅರ್ಹ ಪದವಿ ಶಿಕ್ಷಕರ ಕೊರತೆ ಇದೆ. ಸರ್ಕಾರಿ ಶಾಲೆಗಳಲ್ಲಿ ನೇಮಕಗೊಳ್ಳುವ ಶಿಕ್ಷಕರು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಬಂದಿರುತ್ತಾರೆ. ಗುಣಮಟ್ಟದ ವಿಷಯವಾರು ಬೋಧನೆಯಿಂದ ಫಲಿತಾಂಶ ಉತ್ತಮವಾಗಲಿದೆ. ಸರ್ಕಾರಿ ಶಾಲೆಗಳನ್ನು ಪೋಷಕರು ನಿರ್ಲಕ್ಷ ಮಾಡಬಾರದು ಎಂದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಲಕ್ಷ್ಮಣ್ ಗೌಡ ಮಾತನಾಡಿ, ಶಾಲೆಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ತಳಮಟ್ಟದ ಶಿಕ್ಷಣದಲ್ಲಿ ಶುದ್ಧ ಕುಡಿಯುವ ನೀರು, ಪರಿಸರ, ಆರೋಗ್ಯದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ನ ಮುಖ್ಯಸ್ಥ ಟಿ.ಎಸ್.ಖ್ವಾಜಾ, ಕಾರ್ಯನಿರ್ವಹಣಾಧಿಕಾರಿ ಟಿ.ಎಸ್.ದುವಾರೆ, ಜಿಲ್ಲಾ ಪಂಚಾಯಿತಿ ಸದಸ್ಯರಾದ ರಾಧಮ್ಮ ಮುನಿರಾಜು, ಕೆ.ಸಿ.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ನಂದಿನಿ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ ದೇವಿ, ಸಿ.ಆರ್.ಪಿ. ಶಿವಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಮುನಿರಾಜು, ನಂದಕುಮಾರ್, ಸೀತಮ್ಮ, ಲಕ್ಷ್ಮಮ್ಮ, ಮಂಜುಳಾ, ಕಾಂಗ್ರೆಸ್ ಪರಿಶಿಷ್ಟ ಘಟಕ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಬಿ.ಸಿ.ರಾಮಾಂಜಿನಪ್ಪ, ಮುಖಂಡ ಚಿಕ್ಕನಾರಾಯಣಸ್ವಾಮಿ, ನಾಗರಾಜ್, ಸಿದ್ಧಗಂಗಯ್ಯ, ಪೇಟೆರಾಜಣ್ಣ, ಎಸ್ಡಿಎಂಸಿ ಅಧ್ಯಕ್ಷ ಮುನಿರಾಜು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.