ನವದೆಹಲಿ: ಕೋವಿಡ್–19ಕ್ಕೆ ಲಸಿಕೆ ನೀಡುವಾಗ ಬ್ಯಾಂಕ್ ಹಾಗೂ ವಿಮಾ ಕಂಪನಿಗಳ ಉದ್ಯೋಗಿಗಳಿಗೆ ಆದ್ಯತೆ ನೀಡುವಂತೆ ಕೇಂದ್ರ ಹಣಕಾಸು ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಬ್ಯಾಂಕ್ ಮತ್ತು ವಿಮಾ ಕಂಪನಿಗಳ ಉದ್ಯೋಗಿಗಳು ಸಂಕಷ್ಟದ ಈ ಸಂದರ್ಭದಲ್ಲಿ ಹೆಚ್ಚಿನ ಅಪಾಯ ಎದುರಿಸುತ್ತಿದ್ದಾರೆ ಎಂದು ಸಚಿವಾಲಯ ಹೇಳಿದೆ.
ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ದೇಬಶಿಶ್ ಪಾಂಡಾ ಅವರು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ‘ಇವರಿಗೆ ಆದ್ಯತೆ ಮೇಲೆ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದನ್ನು ಪರಿಗಣಿಸಬೇಕು’ ಎಂದು ಹೇಳಿದ್ದಾರೆ.
‘ನಮ್ಮ ಬ್ಯಾಂಕ್ ಹಾಗೂ ವಿಮಾ ಕಂಪನಿ ಸಿಬ್ಬಂದಿ, ಪಾವತಿ ಸೇವೆ ಒದಗಿಸುವವರು, ಬ್ಯಾಂಕ್ ಮಿತ್ರರು ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳು ಅಡೆತಡೆ ಇಲ್ಲದೆ ಸಿಗುವಂತೆ ನೋಡಿಕೊಳ್ಳುತ್ತಿದ್ದಾರೆ’ ಎಂದು ಪಾಂಡಾ ಅವರು ಟ್ವೀಟ್ ಮಾಡಿದ್ದಾರೆ.
ಈ ವಲಯದ ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸಲು ಮುಕ್ತವಾಗಿ ಓಡಾಟ ನಡೆಸುವ ವ್ಯವಸ್ಥೆ ಇರಬೇಕು. ರಾಜ್ಯಗಳು ಈ ಬಗ್ಗೆ ಗಮನ ನೀಡಬೇಕು ಎಂದು ಪಾಂಡಾ ಅವರು ಪತ್ರದಲ್ಲಿ ಹೇಳಿದ್ದಾರೆ. ದೇಶದ ಬ್ಯಾಂಕಿಂಗ್ ವಲಯದಲ್ಲಿ 13.5 ಲಕ್ಷ ನೌಕರರು ಇದ್ದಾರೆ. ಈ ಪೈಕಿ ಕಳೆದ ವರ್ಷ ಕೋವಿಡ್ನಿಂದಾಗಿ ಒಟ್ಟು 600 ಮಂದಿ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಬ್ಯಾಂಕ್ಗಳ ಒಕ್ಕೂಟ (ಐಬಿಎ) ಮಾಹಿತಿ ನೀಡಿದೆ.