ನವದೆಹಲಿ: ಬೀದಿ ಬದಿ ವ್ಯಾಪಾರಿಗಳಿಗೆ ₹ 3 ಸಾವಿರದಿಂದ ₹4 ಸಾವಿರದವರೆಗಿನ ಮೊತ್ತದ ಕಿರುಸಾಲ ನೀಡಲು ಈ ವರ್ಷ ಹೆಚ್ಚು ಗಮನ ಹರಿಸಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ಹೇಳಿದ್ದಾರೆ.
ಡಿಜಿಟಲ್ ಇಂಡಿಯಾ ಪ್ರಶಸ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿಜಿಟಲ್ ತಂತ್ರಜ್ಞಾನಗಳ ನೆರವಿನ ಮೂಲಕ ಕಿರು ಸಾಲ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ಸಾಂಕ್ರಾಮಿಕದಿಂದ ನಷ್ಟಕ್ಕೆ ಒಳಗಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗಲು 2020ರ ಜೂನ್ನಲ್ಲಿ ಪಿಎಂ ಸ್ವಾನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಯೋಜನೆಯಡಿ ಕಡಿಮೆ ಬಡ್ಡಿದರಕ್ಕೆ ಯಾವುದೇ ಆಧಾರ ಪಡೆಯದೇ ಸಾಲ ನೀಡಲಾಗುತ್ತದೆ.
ದೇಶದ ಮೂಲೆ ಮೂಲೆಗೂ 4ಜಿ ಮತ್ತು 5ಜಿ ಸೇವೆಗಳನ್ನು ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಅವರು ₹52 ಸಾವಿರ ಕೋಟಿ ನೀಡಿದ್ದಾರೆ. ಸ್ಥಳೀಯವಾಗಿ ಅಭಿವೃದ್ಧಿಪಡಿಸಿರುವ 4ಜಿ ಮತ್ತು 5ಜಿ ತಂತ್ರಜ್ಞಾನಗಳು ಈ ವರ್ಷ ಬಳಕೆಗೆ ಲಭ್ಯವಾಗಲಿವೆ ಎಂದು ಅವರು ಹೇಳಿದ್ದಾರೆ.