ಮಂಗಳೂರು: ‘ಕಾರ್ಮಿಕರ ವೇತನದ ಮೇಲೆ ಶೇ 18 ರಷ್ಟು ಜಿಎಸ್ಟಿ ವಿಧಿಸಲಾಗುತ್ತಿದ್ದು, ಇದನ್ನು ಕೈಬಿಡುವಂತೆ ಆಗ್ರಹಿಸಿ ಶೀಘ್ರ ನಿಯೋಗ ಕೊಂಡೊಯ್ದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು’ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಬಸವರಾಜ ಎಸ್. ಜವಳಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಮೊದಲು ವ್ಯಾಟ್ ಇದ್ದಾಗ ಕಾರ್ಮಿಕರ ವೇತನಕ್ಕೆ ವಿನಾಯ್ತಿ ನೀಡಲಾಗಿತ್ತು. ಇದೀಗ ಜಿಎಸ್ಟಿ ವಿಧಿಸುತ್ತಿರುವುದರಿಂದ ಸಣ್ಣ ಉದ್ಯಮಿಗಳು ಸಂಕಷ್ಟ ಎದುರಿಸುವಂತಾಗಿದೆ’ ಎಂದರು.
‘ಕಾರ್ಮಿಕರ ವೇತನಕ್ಕೆ ಸಂಪೂರ್ಣ ಜಿಎಸ್ಟಿ ವಿನಾಯ್ತಿ ನೀಡಬೇಕು. ಇಲ್ಲವೇ ಶೇ 5 ರಷ್ಟು ತೆರಿಗೆ ವಿಧಿಸಬೇಕು ಎಂದು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಕುರಿತು ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ವೀರಪ್ಪ ಮೊಯಿಲಿ ಅವರ ಜತೆಗೂ ಚರ್ಚಿಸಲಾಗಿದೆ’ ಎಂದು ತಿಳಿಸಿದರು.
‘ಚೀನಾಕ್ಕೆ ಹೋಲಿಸಿದರೆ ಸಣ್ಣ ಕೈಗಾರಿಕೆಗಳ ಕ್ಷೇತ್ರದಲ್ಲಿ ನಾವು ಇನ್ನೂ 100 ವರ್ಷಗಳಷ್ಟು ಹಿಂದೆ ಇದ್ದೇವೆ. ಸಣ್ಣ ಕೈಗಾರಿಕೆಗಳಿಗೆ ಮೂಲ ಸೌಕರ್ಯ ಒದಗಿಸುವುದರ ಜತೆಗೆ ಉದ್ಯಮ ಪರವಾನಗಿ, ಸಾಲ ವಿತರಣೆ ನೀತಿ ಇನ್ನಷ್ಟು ಸರಳೀಕರಣ ಮಾಡಬೇಕು’ ಎಂದು ಆಗ್ರಹಿಸಿದರು.
‘ರಾಜ್ಯ ಮಟ್ಟದಲ್ಲಿ ಕೇಂದ್ರಿಕೃತ ಇ–ಪ್ರೊಕ್ಯೂರ್ಮೆಂಟ್ ಮೂಲಕ ಕೆಲವು ಕಂಪನಿಗಳಿಗೆ ಗುತ್ತಿಗೆ ನೀಡಲಾಗುತ್ತಿದೆ. ಇದನ್ನು ಜಿಲ್ಲಾ ಮಟ್ಟದಲ್ಲಿ ಮಾಡಬೇಕು. ಇದರಿಂದ ಆಯಾ ಜಿಲ್ಲೆ ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ಸಹಾಯಕವಾಗಲಿದೆ’ ಎಂದರು.