ಬೆಂಗಳೂರು: ತೆಂಗಿನ ನಾರು ಉದ್ದಿಮೆ ಕ್ಷೇತ್ರದಲ್ಲಿ ಕನಿಷ್ಠ 1 ಲಕ್ಷ ಉದ್ಯೋಗ ಸೃಷ್ಟಿಸಲು ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ತೆಂಗಿನ ನಾರಿನ ಉದ್ಯಮಗಳ ಪುನಶ್ಚೇತನ ಕುರಿತು ಚರ್ಚಿಸಲು ಬುಧವಾರ ಕರೆದಿದ್ದ ಸಭೆಯಲ್ಲಿ ಅವರು ಮಾತನಾಡಿದರು.
‘ದೇಶ ಒಟ್ಟು ತೆಂಗು ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ 29. ಆದರೆ, ತೆಂಗಿನ ನಾರಿನ ಉತ್ಪಾದನೆಯಲ್ಲಿ ಶೇ 10 ರಷ್ಟು ಮಾತ್ರ ಇದೆ. ರಾಜ್ಯದಲ್ಲಿ ಉತ್ತಮ ಗುಣಮಟ್ಟದ ತೆಂಗಿನ ನಾರು ಲಭ್ಯವಿದೆ. ಈ ಉದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಲು ಸಿದ್ಧರಿದ್ದೇವೆ’ ಎಂದು ಮುಖ್ಯಮಂತ್ರಿ ಹೇಳಿದರು.
ತೆಂಗಿನ ನಾರಿನ ಉತ್ಪನ್ನಗಳ ತಯಾರಿಕಾ ಘಟಕಗಳ ಸ್ಥಾಪನೆಗೆ ಪೂರಕ ವಾತಾವರಣ, ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವಂತೆಯೂ ಅವರು ಸಲಹೆ ನೀಡಿದರು.