ಬೆಂಗಳೂರು: ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘವು (ಎಐಬಿಎಇ) ಶನಿವಾರ ಮುಷ್ಕರಕ್ಕೆ ಕರೆ ನೀಡಿದೆ. ಇದರ ಪರಿಣಾಮವಾಗಿ, ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಲ್ಲಿ ಮಾತ್ರ ಸೇವೆಗಳಲ್ಲಿ ತುಸು ವಿಳಂಬ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ಹೊರಗುತ್ತಿಗೆ ಪದ್ಧತಿಯನ್ನು ವಿರೋಧಿಸಿ ಸಂಘವು ಮುಷ್ಕರ ನಡೆಸಲು ನಿರ್ಧರಿಸಿದೆ.
ಬ್ಯಾಂಕ್ಗಳ ಅಧಿಕಾರಿಗಳು ಈ ಮುಷ್ಕರದಲ್ಲಿ ಭಾಗವಹಿಸುವುದಿಲ್ಲ. ಆದರೆ, ನೌಕರರಲ್ಲಿ ಕೆಲವರು ಮುಷ್ಕರದಲ್ಲಿ ಭಾಗವಹಿಸುವುದರಿಂದ ಬ್ಯಾಂಕ್ ಶಾಖೆಗಳಲ್ಲಿ ಸಿಬ್ಬಂದಿ ಸಂಖ್ಯೆ ಕಡಿಮೆ ಇರಲಿದೆ. ಇದರಿಂದಾಗಿ ಸೇವೆಯಲ್ಲಿ ವಿಳಂಬ ಆಗುತ್ತದೆಯೇ ಹೊರತು, ಯಾವುದೇ ಶಾಖೆಯಲ್ಲಿ ಕೆಲಸ ಸ್ಥಗಿತವಾಗುವುದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಾಖೆಗಳಲ್ಲಿ ಹಣ ವರ್ಗಾವಣೆ, ಸ್ವೀಕೃತಿ, ಸಾಲ ಮಂಜೂರಾತಿ, ಚೆಕ್ ಕ್ಲಿಯರೆನ್ಸ್ ನಂಥ ಸೇವೆಗಳಲ್ಲಿ ವ್ಯತ್ಯಯ ಆಗುವ ಕುರಿತು ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ ಒಳಗೊಂಡು ಹಲವು ಬ್ಯಾಂಕ್ಗಳು ಈಗಾಗಲೇ ಗ್ರಾಹಕರಿಗೆ ಸೂಚನೆ ನೀಡಿವೆ ಎಂದು ಪಿಟಿಐ ವರದಿ ಮಾಡಿದೆ.