ಮುಂಬೈ : ಯೆಸ್ ಬ್ಯಾಂಕ್ ಗ್ರಾಹಕರ ಹಣ ಸುರಕ್ಷಿತವಾಗಿದೆ. ಆತಂಕಪಡಬೇಡಿ ಎಂದು ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್, ಗ್ರಾಹಕರಲ್ಲಿ ವಿಶ್ವಾಸ ತುಂಬುವ ಪ್ರಯತ್ನ ನಡೆಸಿವೆ.
ಹಣಕಾಸು ಬಿಕ್ಕಟ್ಟಿನ ಸುಳಿಗೆ ಸಿಲುಕಿರುವ ಬ್ಯಾಂಕ್ ಪುನಶ್ಚೇತನಗೊಳಿಸುವ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಕಾರ್ಯಗತಗೊಳಿಸುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಭರವಸೆ ನೀಡಿದೆ.
‘30 ದಿನಗಳ ಒಳಗೆ ಅತ್ಯಂತ ತ್ವರಿತವಾಗಿ ಪರಿಹಾರ ಕಂಡುಕೊಳ್ಳಲಾಗುವುದು, ಆರ್ಬಿಐನಿಂದ ನೀವು ಸದ್ಯದಲ್ಲೇ ಕ್ಷಿಪ್ರ ಕ್ರಮ ಕಾಣುವಿರಿ’ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
‘ದೇಶಿ ಹಣಕಾಸು ಮತ್ತು ಬ್ಯಾಂಕಿಂಗ್ ವಲಯದ ಸ್ಥಿರತೆ ಮತ್ತು ಸಂಕಷ್ಟದ ಪರಿಸ್ಥಿತಿಯಿಂದ ತ್ವರಿತವಾಗಿ ಹೊರಬರಲಿ ಎನ್ನುವ ಉದ್ದೇಶದಿಂದ ಬ್ಯಾಂಕ್ ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ. ನಮ್ಮ ಬ್ಯಾಂಕಿಂಗ್ ಕ್ಷೇತ್ರ ಸದೃಢ ಮತ್ತು ಸುರಕ್ಷಿತವಾಗಿರುವ ಬಗ್ಗೆ ನಾನು ಭರವಸೆ ನೀಡಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.