ಒಂದು ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆಯುವ ರೈತರಿಗೆ ₹ 10,000 ನಗದು ಪ್ರೋತ್ಸಾಹಧನವನ್ನು 2 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮುಖಾಂತರ ನೀಡಲಾಗುವುದು. ಪ್ರತಿ ಫಲಾನುಭವಿ ರೈತರಿಗೆ ಬಿತ್ತನೆ ಪ್ರದೇಶದಲ್ಲಿ ಗರಿಷ್ಠ ಎರಡು ಹೆಕ್ಟೇರ್ಗೆ ಮಾತ್ರ ಪ್ರೋತ್ಸಾಹಧನ ನೀಡಲಾಗುವುದು ಎಂದು ಸರ್ಕಾರ ಘೋಷಿಸಿತ್ತು. ಈ ಯೋಜನೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ರತಿ ಹೆಕ್ಟೇರ್ ಸಿರಿಧಾನ್ಯಕ್ಕೆ ₹ 6,000 ಪ್ರೋತ್ಸಾಹಧನ ನೀಡಿದರೆ ಇನ್ನುಳಿದ ₹ 4,000 ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರ ನೀಡಲಿದೆ. ತಾಲ್ಲೂಕಿಗೆ ಸರ್ಕಾರ 9,271 ಹೆಕ್ಟೇರ್ ಬಿತ್ತನೆ ಗುರಿ ನಿಗದಿ ಮಾಡಿತ್ತು. ಆದರೆ, ಮುಂಗಾರು ಮಳೆ ಸಕಾಲಕ್ಕೆ ಬಾರದ ಕಾರಣ 8,725 ಹೆಕ್ಟೇರ್ ಸಾಧನೆಯಾಗಿದೆ. ರೈತಸಿರಿ ಯೋಜನೆಯಡಿ ಪ್ರೋತ್ಸಾಹಧನ ಪಡೆಯಲು ತಾಲ್ಲೂಕಿನ 10,820 ರೈತರು ಅರ್ಜಿ ಸಲ್ಲಿಸಿದ್ದರು.