ಮುಂಬೈ: ರಾಷ್ಟ್ರೀಯ ಷೇರುಪೇಟೆಯ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ನಾಲ್ಕು ದಿನಗಳ ಕಾಲ ವಿಚಾರಣೆಗಾಗಿವಶಕ್ಕೆ ಪಡೆಯಲಿದೆ. ಇದಕ್ಕೆ ನ್ಯಾಯಾಲಯ ಸಮ್ಮತಿ ಸೂಚಿಸಿದೆ.
ಷೇರುಗಳನ್ನು ತ್ವರಿತವಾಗಿ ಖರೀದಿಸಲು ಹಾಗೂ ಮಾರಾಟ ಮಾಡಲು ವರ್ತಕರಿಗೆ ಅವಕಾಶ ಕಲ್ಪಿಸುವ ಸೌಲಭ್ಯವನ್ನು ದುರ್ಬಳಕೆ ಮಾಡಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರಾ ಅವರ ವಿಚಾರಣೆ ನಡೆಯಲಿದೆ.
ಚಿತ್ರಾ ಅವರ ಜೊತೆ ಎನ್ಎಸ್ಇಯ ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ ಶಾಮೀಲಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.
ಚಿತ್ರಾ ಅವರು ಹಿಮಾಲಯ ಪರ್ವತಗಳಲ್ಲಿ ವಾಸಿಸುವ ಯೋಗಿಯೊಬ್ಬರ ಮಾತು ಕೇಳಿ ಆನಂದ್ ಸುಬ್ರಮಣಿಯನ್ ಅವರನ್ನು ಎನ್ಎಸ್ಇಯ ಗ್ರೂಪ್ ಆಪರೇಟಿಂಗ್ ಆಫೀಸರ್ ಹುದ್ದೆಗೆ ನೇಮಕ ಮಾಡಿದ್ದರು.
ಸುಬ್ರಮಣಿಯನ್ ನೇಮಕ ಪ್ರಕ್ರಿಯೆಯಲ್ಲಿ ನಿಯಮಗಳ ಪಾಲನೆ ಆಗಿಲ್ಲ ಎಂದು ಸೆಬಿ ಆರೋಪಿಸಿತ್ತು. ಚಿತ್ರಾ ಅವರಿಗೆ ಸೆಬಿ ₹ 3 ಕೋಟಿ ದಂಡ ವಿಧಿಸಿತ್ತು.