ಬೆಂಗಳೂರು: ಕರ್ನಾಟಕ ಖಾಸಗಿ ವೈದ್ಯ ಸಂಸ್ಥೆಗಳ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಭಾರತೀಯ ವೈದ್ಯ ಮಂಡಳಿಗೆ (ಐಎಂಸಿ) ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ, ‘ಈ ಪ್ರಕರಣದ ವಿಸ್ತೃತ ವಿಚಾರಣೆಯ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟು ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.
ಖಾಸಗಿ ಆಸ್ಪತ್ರೆ ವೈದ್ಯರನ್ನು ನಿಯಂತ್ರಿಸುವ ಸಲುವಾಗಿ ಇತ್ತೀಚೆಗೆ ಜಾರಿಗೊಳಿಸಲಾದ ಈ ತಿದ್ದುಪಡಿ ಕಾಯ್ದೆಯನ್ನು ಪುತ್ತೂರಿನ ಡಾ.ಕೆ.ರವಿಪ್ರಕಾಶ್ ಎಂಬುವರು ಪ್ರಶ್ನಿಸಿರುವ ಅರ್ಜಿ ಇದಾಗಿದೆ.
ಅರ್ಜಿಯಲ್ಲಿ ಏನಿದೆ?: ‘ತಿದ್ದುಪಡಿ ತಾರತಮ್ಯದಿಂದ ಕೂಡಿದೆ. ಇದರಲ್ಲಿ ಕೇವಲ ಖಾಸಗಿ ವೈದ್ಯರನ್ನು ಗುರಿಯಾಗಿಸಿಕೊಂಡು ಹಲವು ಕಠಿಣ ಅಂಶಗಳನ್ನು ಸೇರ್ಪಡೆ ಮಾಡಲಾಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ.
‘ಹೆಚ್ಚುವರಿ ಶುಲ್ಕ ಸಂಗ್ರಹಕ್ಕೆ ಕಡಿವಾಣ ಹಾಕಲಾಗಿದೆ. ಗಂಭೀರ ಪ್ರಕರಣಗಳಲ್ಲಿ ಚಿಕಿತ್ಸೆ ಪಡೆಯಬೇಕಾದರೆ ಅಗತ್ಯ ಹಾಗೂ ಹೆಚ್ಚುವರಿ ಶುಲ್ಕವನ್ನು ಪಡೆಯಬೇಕಾಗುತ್ತದೆ. ತಿದ್ದುಪಡಿಯಲ್ಲಿ ಅಪರಾಧ ದಂಡ ಸಂಹಿತೆ ಮತ್ತು ಭಾರತೀಯ ದಂಡ ಸಂಹಿತೆ ವಿಧಿಸುವ ಕುರಿತು ಖಾಸಗಿ ಹಾಗೂ ಸರಕಾರಿ ವೈದ್ಯರ ನಡುವೆ ತಾರತಮ್ಯ ಮಾಡಲಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.