ಬೆಂಗಳೂರು: ರಾಜ್ಯದಲ್ಲಿ ಜಾರಿಗೆ ಬರಲಿರುವ ವಿವಿಧ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡಲು ಭಾರತ-ಅರಬ್ ವಾಣಿಜ್ಯ ಮಂಡಳಿ ಮುಂದಾಗಿದೆ.
ಈ ನಿಟ್ಟಿನಲ್ಲಿ ಭಾರತ-ಅರಬ್ ವಾಣಿಜ್ಯ ಮಂಡಳಿ ಅಧ್ಯಕ್ಷ ಮತ್ತು ಸಂಪುಟದ ಮಾಜಿ ಕಾರ್ಯದರ್ಶಿ ಕೃಷ್ಣಕುಮಾರ್ ಅವರು, 22 ಅರಬ್ ದೇಶಗಳ ಸದಸ್ಯರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇತ್ತೀಚೆಗೆ ಭೇಟಿಯಾಗಿ ಮನವಿ ಸಲ್ಲಿಸಿದರು.
ಮಂಡಳಿಯ ಕಾರ್ಯಕಾರಿ ನಿರ್ದೇಶಕ ಮೊಹ್ಮದ್ ಇಕ್ಬಾಲ್, ಸಂಸ್ಥೆಯ ನಿರ್ದೇಶಕ ಆಸೀಫ್ ಇಕ್ಬಾಲ್ ಹಾಗೂ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು, ರಾಜ್ಯದ ಅಲ್ಪಸಂಖ್ಯಾತರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮತ್ತು ಉದ್ಯೋಗ ಸೃಷ್ಟಿಗಾಗಿ ಮಂಡಳಿಯಿಂದ ಚಾಲನೆಯಲ್ಲಿರುವ ವಿವಿಧ ಯೋಜನೆಗಳನ್ನು ಮುಖ್ಯಮಂತ್ರಿಗೆ ವಿವರಿಸಿದರು.
ಇದೇ ವೇಳೆ ಅರಬ್ ರಾಷ್ಟ್ರಗಳಿಂದ ಕರ್ನಾಟಕಕ್ಕೆ ಹೆಚ್ಚಿನ ಬಂಡವಾಳ ತೊಡಗಿಸುವ ಕುರಿತು ನಿಯೋಗ ಚರ್ಚಿಸಿತು. ಸಭೆಯಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಖಮರುಲ್ ಇಸ್ಲಾಂ, ವಿಧಾನಪರಿಷತ್ ಸದಸ್ಯ ನಸೀರ್ ಅಹ್ಮದ್, ಶಾಸಕ ಎನ್.ಎ. ಹ್ಯಾರೀಸ್ ಹಾಜರಿದ್ದರು.