ನವದೆಹಲಿ: ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ ದುರ್ಬಲಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೊರೆ ಹೋಗುವ ಸಾಧ್ಯತೆ ಇದೆ.
ಕೇಂದ್ರ ಕಾನೂನು ಸಚಿವಾಲಯ ಕರಡು ಸುಗ್ರೀವಾಜ್ಞೆಯ ಸಿದ್ಧತೆಯಲ್ಲಿ ತೊಡಗಿದೆ. ಸದ್ಯಕ್ಕೆ ಕರಡು ಸುಗ್ರೀವಾಜ್ಞೆಯನ್ನು ಸಂಪುಟ ಪರಿಶೀಲನೆಗೆ ಇಡುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.
ಎಸ್ಸಿ/ಎಸ್ಟಿ ಕಾಯ್ದೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪರಿಶೀಲಿಸುವಂತೆ ಕೋರಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಅರ್ಜಿ ಸಲ್ಲಿಸಿದೆ.
ಸುಪ್ರೀಂ ಕೋರ್ಟ್ ನೀಡುವ ಆದೇಶ ನೋಡಿಕೊಂಡು ಸರ್ಕಾರ ಮುಂದಿನ ಹೆಜ್ಜೆ ಇಡುವ ಸಾಧ್ಯತೆ ಇದೆ. ಒಂದು ವೇಳೆ ಅನುಕೂಲಕರ ಆದೇಶ ಬಾರದಿದ್ದರೆ ಸುಗ್ರೀವಾಜ್ಞೆಯನ್ನು ಸಿದ್ಧವಾಗಿ ಇಟ್ಟುಕೊಳ್ಳುವ ತಂತ್ರ ರೂಪಿಸಿದೆ ಎಂದು ಮೂಲಗಳು ತಿಳಿಸಿವೆ.
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ‘ಎಸ್ಸಿ/ಎಸ್ಟಿ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆ’ ಮಂಡಿಸುವುದು ಸರ್ಕಾರದ ಮುಂದಿರುವ ಎರಡನೇ ಆಯ್ಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.