ಬಾಗಲಕೋಟೆ: 'ಸಚಿವ ಸಂಪುಟಕ್ಕೆ ನನ್ನನ್ನು ತೆಗೆದುಕೊಳ್ಳದ್ದಕ್ಕೆ ಅಭಿಮಾನಿಗಳಿಗೆ ನೋವಾಗಿದೆ. ಇದು ನನಗೂ ನೋವುಂಟು ಮಾಡಿದೆ. ಆದ್ದರಿಂದ ಬೆಳಗಾವಿ ವಿಧಾನಮಂಡಲ ಅಧಿವೇಶನದಿಂದ ದೂರ ಉಳಿಯುತ್ತೇನೆ' ಎಂದು ಬಿಜೆಪಿ ಶಾಸಕಕೆ.ಎಸ್. ಈಶ್ವರಪ್ಪ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಜನರು ಫೋನ್ ಮಾಡಿ ನಿಮ್ಮನ್ನೇಕೆ ಸಂಪುಟಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ಇದರಿಂದ ಅವಮಾನ ಆಗ್ತಿದೆ. ಇದನ್ನು ಅರ್ಥ ಮಾಡಿಸಲು ಸೌಜನ್ಯದ ಪ್ರತಿಭಟನೆ ಮಾಡುತ್ತಿದ್ದೇನೆ' ಎಂದು ಅಸಮಾಧಾನ ಹೊರಹಾಕಿದರು.
'ಬೆಳಗಾವಿಗೆ ಹೋಗ್ತೀನಿ. ಆದರೆ, ಅಧಿವೇಶನಕ್ಕೆ ಹೋಗಲ್ಲ. ಸಭಾಧ್ಯಕ್ಷರಿಂದ ಅನುಮತಿ ಪಡೆಯಲು ಹೋಗುತ್ತಿದ್ದೇನೆ ಎಂದರು.
'ಇವತ್ತು, ನಾಳೆ ನಿಮ್ಮನ್ನ ಸಚಿವರನ್ನ ಮಾಡ್ತೀವಿ ಎಂದು ಸಿಎಂ ಬೊಮ್ಮಾಯಿ ಹೇಳುತ್ತಲೇ ಇದ್ದಾರೆ. ಯಾವ ಕಾರಣಕ್ಕೆ ತೆಗೆದುಕೊಳ್ಳುತ್ತಿಲ್ಲ ಗೊತ್ತಿಲ್ಲ' ಎಂದರು.