ಬಾಗಲಕೋಟೆ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಹಂಚಿಕೆ ಮಾಡಿದ ಭೂಮಿಯನ್ನು ಕೈಗಾರಿಕೆಳಿಗೆ ಬಳಸಿಕೊಳ್ಳಲಾಗಿದೆಯೇ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2008 ರಿಂದ ರಾಜ್ಯದಲ್ಲಿ ಕೈಗಾರಿಕೆಗಾಗಿ ಲ್ಯಾಂಡ್ ಬ್ಯಾಂಕ್ ಆರಂಭಿಸಲಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಕೈಗಾರಿಕೆಗೆ ಹಂಚಿದ ಭೂಮಿ ಯಾವುದಕ್ಕೆ ಬಳಕೆಯಾಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಅಗ್ರಹಿಸಿದರು.
ಭೂಮಿ ಪಡೆದ 5 ವರ್ಷಗಳಲ್ಲಿ ಕೈಗಾರಿಕೆ ಸ್ಥಾಪಿಸದಿದ್ದರೆ ಭೂಮಿ ವಾಪಸ್ ಪಡೆಯಬೇಕು ಎಂದಿದೆ. ಎಷ್ಟು ವಾಪಸ್ ಪಡೆಯಲಾಗಿದೆ ಎಂದು ಪ್ರಶ್ನಿಸಿದರು.
ನಾಲ್ಕು ತಿಂಗಳ ಹಿಂದೆ ಬಾದಾಮಿ ತಾಲ್ಲೂಕಿನ ಹಲಕುರ್ಕಿಯಲ್ಲಿ ಕಾಲುವೆ ನಿರ್ಮಾಣಕ್ಕೆ ನೋಟಿಸ್ ನೀಡಿದ ಭೂಮಿಯನ್ನು ಈಗ ಕೈಗಾರಿಕೆಗೆ ವಶ ಪಡಿಸಿಕೊಳ್ಳಲು ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮುಂದಾಗಿದ್ದಾರೆ. ಇವರಿಗೆ ಹೇಳುವವರು, ಕೇಳುವವರು ಯಾರು ಇಲ್ಲವೇ ಎಂದು ಪ್ರಶ್ನಿಸಿದರು.
ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ಗೆ ಆಗ್ರಹಿಸಿ ನವೆಂಬರ್ ನಲ್ಲಿ ಬಸವ ಕಲ್ಯಾಣದಿಂದ ಬೆಂಗಳೂರುವರೆಗೆ ಪರಿವರ್ತನಾ ಯಾತ್ರೆ ಮಾಡಲಾಗುವುದು ಎಂದರು.