ಬಾಗಲಕೋಟೆ: ಲಿಂಗಾಯತ ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರ್ಪಡೆ ಮಾಡುವುದನ್ನು ವಿರೋಧಿಸಿ ಡಿ.26 ರಂದು ಬೆಳಿಗ್ಗೆ 10ಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧದ ಕೊಂಡಸಕೊಪ್ಪ ಬಳಿ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈಜ್ಞಾನಿಕ ವರದಿ ಇಲ್ಲದೆ ಮುಂದುವರೆದ ಸಮುದಾಯಗಳನ್ನು ಹಿಂದುಳಿದ ಪ್ರವರ್ಗಗಳಿಗೆ ಸೇರಿಸುವ ದುಸ್ಸಾಹಸಕ್ಕೆ ಸರ್ಕಾರ ಕೈಹಾಕಬಾರದು ಎಂದು ಎಚ್ಚರಿಸಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ ಆರ್ಥಿಕ ಸಮೀಕ್ಷೆ ವರದಿ ಬಿಡುಗಡೆಗೊಳಿಸಿ. ಅಲ್ಲಿರುವ ವೈಜ್ಞಾನಿಕ ಅಂಕಿ–ಅಂಶಗಳ ಆಧಾರದ ಮೇಲೆ ನೂತನ ಮೀಸಲಾತಿ ಪಟ್ಟಿ ಮಾಡಬೇಕು ಎಂದು ಆಗ್ರಹಿಸಿದರು.
ರಾಜಕೀಯ ಒತ್ತಡಕ್ಕೆ ಮಣಿದು ಮುಂದುವರೆದ ಸಮಾಜಗಳನ್ನು ಸೇರ್ಪಡೆಗೊಳಿಸಿ ಶೋಷಿತ ವರ್ಗಗಳಿಗೆ ಅನ್ಯಾಯ ಮಾಡಿದರೆ, ರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಒಕ್ಕೂಟದ ಮುಖಂಡರಾದ ರವೀಂದ್ರ ಕಲಬುರ್ಗಿ, ಗೋಪಾಲ ಹಳಪೇಟ ಮತ್ತಿತರರು ಇದ್ದರು.