ಬಾದಾಮಿ: ಕೋವಿಡ್ ಲಸಿಕೆ ತೆಗೆದುಕೊಂಡು ಬೈಕ್ನಲ್ಲಿ ತೆರಳುವ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಆಶಾ ಕಾರ್ಯಕರ್ತೆ ಕುಟುಂಬಕ್ಕೆ ಸರ್ಕಾರ ಪರಿಹಾರ ಮಂಜೂರು ಮಾಡಬೇಕು ಎಂದು ಆಶಾ ಕಾರ್ಯಕರ್ತೆಯರು ಪ್ರತಿಭಟಿಸಿ ತಾಲ್ಲೂಕು ಆರೋಗ್ಯ ಇಲಾಖೆಯ ಅಧಿಕಾರಿಗೆ ಈಚೆಗೆ ಮನವಿ ಸಲ್ಲಿಸಿದರು.
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಚಂದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೋವಿಡ್ ಲಸಿಕೆ ತೆಗೆದುಕೊಂಡು ಹೋಗುವಾಗ ಆಶಾ ಕಾರ್ಯಕರ್ತೆಚೈತ್ರಾ ಮತ್ತು ಪತಿ ಉಳುವಯ್ಯ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರ ಮಕ್ಕಳಿಗೆ ಪರಿಹಾರ ಕೊಡಬೇಕು ಎಂದು ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯ ಸಂಘದ ತಾಲ್ಲೂಕು ಘಟಕದ ಸದಸ್ಯರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ ಅವರಿಗೆ ಮನವಿ ಮೂಲಕ ಒತ್ತಾಯಿಸಿದರು.
ಕೋವಿಡ್ ಲಸಿಕೆ ಪೂರೈಸುವ ಜವಾಬ್ದಾರಿ ಆಶಾ ಕಾರ್ಯಕರ್ತೆಯ ಕೆಲಸವಲ್ಲ. ಒತ್ತಡ ಹೇರಿದ ಸಿಬ್ಬಂದಿಯ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕು ಘಟಕದ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಶೈಲಾ ಕರಿಗಾರ, ಉಪಾಧ್ಯಕ್ಷೆ ದಾಕ್ಷಾಯಿಣಿ ಮಠದ, ಚನ್ನಮ್ಮ ಪಟ್ಟೇದ, ತೀರ್ಥವ್ವ ಸರ್ಕಾರ, ಮಹಾದೇವಿ ಬಡಿಗೇರ, ಹನುಮವ್ವ ಮಾದರ, ಸುನಂದಾ ಹಡಪದ, ಶೋಭಾ ಹವಾಜಿ,ರುಕ್ಮವ್ವ ಪೂಜಾರ, ಯಲ್ಲವ್ವ ಸಕ್ರಿ ಇದ್ದರು.