ಬಾಗಲಕೋಟೆ: ಕೋವಿಡ್–19 ಸೋಂಕಿನಿಂದ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಗುಣಮುಖರಾಗಿ ಮಂಗಳವಾರ ಇಲ್ಲಿನ ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 79 ಮಂದಿಗೆ ಸೋಂಕು ದೃಢಪಟ್ಟಿದೆ. ಅವರಲ್ಲಿ 75 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದು, ಈಗ ಏಳು ಸಕ್ರಿಯ ಪ್ರಕರಣ ಉಳಿದಂತಾಗಿದೆ.
ಬಾದಾಮಿ ತಾಲ್ಲೂಕಿನ ಢಾಣಕಶಿರೂರಿನ 50 ವರ್ಷದ ವ್ಯಕ್ತಿ ಹಾಗೂ ಬಾಗಲಕೋಟೆ ನಗರದ 28 ವರ್ಷದ ಯುವಕ ಸೋಂಕಿನಿಂದ ಗುಣಮುಖರಾದವರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಇಬ್ಬರಿಗೂ ಪ್ರಮಾಣಪತ್ರ ವಿತರಿಸಿದರು. ಆಸ್ಪತ್ರೆ ಸಿಬ್ಬಂದಿ ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು.