ಚಿತ್ತಾಪುರ: ‘ಬಾಗಲಕೋಟೆ ಜಿಲ್ಲೆಯ ಗುಳೆದಗುಡ್ಡ ತಾಲ್ಲೂಕಿನ ಹಳದೂರು ಗ್ರಾಮ ಪಂಚಾಯಿತಿ ಕಚೇರಿಯ ಡೇಟಾ ಎಂಟ್ರಿ ಆಪರೇಟರ್ ಅನ್ನಪೂರ್ಣ ಅವರು ಕೆಲವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಪಿಗಳನ್ನು ಬಂಧಿಸಬೇಕು’ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಕ್ಷೇಮಾಭಿವೃದ್ದಿ ನೌಕರರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹಣಮಂತ್ರಾಯ ಅಲ್ಲೂರ್ ಅವರ ನೇತೃತ್ವದಲ್ಲಿ ಪದಾಧಿಕಾರಿ ಲಿಯಾಕತ ಅಲಿ, ಶ್ರೀಶೈಲ್, ಮಹೇಶ, ವಿಜಯಕುಮಾರ ಹಾಗೂ ದೇವಿಂದ್ರಪ್ಪ ಅವರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ, ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರಿಗೆ ಮನವಿ ಸಲ್ಲಿಸಿದರು.
ಗ್ರಾಮದ ಕೆಲವು ಯುವಕರು ಪಂಚಾಯಿತಿ ಕಚೇರಿಗೆ ಬಂದು ವಿನಾ ಕಾರಣ ಮಾನಸಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಕಾರಣವಾಗಿದ್ದಾರೆ. ಕೆಲವು ಗ್ರಾಮ ಪಂಚಾಯಿತಿ ಸದಸ್ಯರು ಅದಕ್ಕೆ ಸಾಥ್ ಕೊಟ್ಟಿದ್ದಾರೆ. ಸಾಯುವ ಕೊನೆ ಕ್ಷಣದಲ್ಲಿ ಅನ್ನಪೂರ್ಣ ಅವರು ಕಿರುಕುಳ ನೀಡಿದ ಆರೋಪಿಗಳ ಹೆಸರು ಪ್ರಸ್ತಾಪಿಸಿದರೂ ಇಲ್ಲಿಯವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.