ಬಾದಾಮಿ: ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯ್ತಿ ನೌಕರರು ಪ್ರತಿಭಟನೆ ನಡೆಸಿ ತಾಲ್ಲೂಕು ಪಂಚಾಯ್ತಿ ಇಒ ಮಲ್ಲಿಕಾರ್ಜುನ ಕಲಾದಗಿ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕು ಘಟಕದ ಗ್ರಾಮ ಪಂಚಾಯ್ತಿ ನೌಕರರ ಸಂಘ (ಸಿಐಟಿಯು ಸಂಯೋಜಿತ ) ಸಂಘಟನೆಯ ಆಶ್ರಯದಲ್ಲಿ ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಮಾಸಿಕ ವೇತನ ಬಾರದೇ ಗ್ರಾಮ ಪಂಚಾಯ್ತಿ ನೌಕರರು ಸಂಕಷ್ಟದಲ್ಲಿದ್ದಾರೆ. ಸರ್ಕಾರದಲ್ಲಿ ಅತೀ ಕೆಳದರ್ಜೆಯ ನೌಕರರಾಗಿದ್ದು ಅನೇಕ ಕಷ್ಟಗಳನ್ನು ಅನುಭವಿಸಿ ಜೀವನ ಸಾಗಿಸುತ್ತಿದ್ದಾರೆ. ವೇತನವಿಲ್ಲದೆ ಕೆಲವು ನೌಕರರು ಸಾವಿಗೆ ಶರಣಾಗಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಗ್ರಾಮ ಪಂಚಾಯ್ತಿ ನೌಕರರಿಗೆ ಮುಂಗಡಪತ್ರದಲ್ಲಿ ₹ 700 ಕೋಟಿ ಘೋಷಣೆ ಮಾಡಬೇಕು. ಮಾಸಿಕ ಕನಿಷ್ಠ ವೇತನ ಮಂಜೂರಾತಿ. ಸಿಬ್ಬಂದಿಗೆ ಪಿಂಚಣಿ ಸೌಲಭ್ಯ, ಬಡ್ತಿ ಅವಕಾಶವನ್ನು ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ತಾಲ್ಲೂಕು ಘಟಕದ ಗ್ರಾಮ ಪಂಚಾಯ್ತಿ ನೌಕರರ ಸಂಘದ ಅಧ್ಯಕ್ಷ ಶಿಲಾಧರ ನಾಯಕ, ಕಾರ್ಯದರ್ಶಿ ಕುಮಾರೇಶ ಕಳಕನ್ನವರ, ಬಿಲ್ ಕಲೆಕ್ಟರ್, ಗುಮಾಸ್ತ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟದ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.