ಬಾಗಲಕೋಟೆ:ಜಮಖಂಡಿಯನ್ನುಬಾಗಲಕೋಟೆಯಿಂದ ಬೇರ್ಪಡಿಸಿ ಪ್ರತ್ಯೇಕ ಜಿಲ್ಲೆಯಾಗಿಸುವಂತೆ ಒತ್ತಾಯಿಸಿ ಜಿಲ್ಲಾ ಹೋರಾಟ ಸಮಿತಿ ಗುರುವಾರ ಕರೆ ನೀಡಿರುವ ಬಂದ್ ಕರೆಗೆ ಜಮಖಂಡಿ ನಗರದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಜಮಖಂಡಿಯ ಬಸ್ ನಿಲ್ದಾಣ ಬಿಕೊ ಎನ್ನುತ್ತಿದ್ದು, ಸಾರಿಗೆ ಸಂಸ್ಥೆ ಬಸ್ ಗಳು ಮುಂಜಾನೆಯಿಂದಲೇ ರಸ್ತೆಗೆ ಇಳಿಯಲಿಲ್ಲ. ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ವ್ಯಾಪಾರಸ್ಥರು ಬೆಂಬಲ ನೀಡಿದರು. ಶಾಲೆ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಜಮಖಂಡಿ, ಮುಧೋಳ, ರಬಕವಿ-ಬನಹಟ್ಟಿ, ತೇರದಾಳ, ಬೆಳಗಾವಿ ಜಿಲ್ಲೆಯ ಅಥಣಿ, ರಾಮದುರ್ಗ ತಾಲ್ಲೂಕುಗಳನ್ನು ಸೇರಿಸಿ ಪ್ರತ್ಯೇಕ ಜಿಲ್ಲೆ ಘೋಷಿಸಿ ಎಂಬುದು ಪ್ರತಿಭಟನಾಕಾರರ ಬೇಡಿಕೆ ಆಗಿದೆ.
ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಜಮಖಂಡಿಗೆ ಬರಲಿದ್ದಾರೆ. ಹಾಗಾಗಿ ಇಂದಿನ ಬಂದ್ ಕರೆ ಮಹತ್ವ ಪಡೆದಿದೆ.