ಬೆಂಗಳೂರು: ‘ಬೆಂಗಳೂರಿನ ಹೊರವಲಯದ ಪಟ್ಟಂದೂರು ಅಗ್ರಹಾರದ ಕೆರೆಯ ಬಫರ್ ವಲಯದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಯಮ ಉಲ್ಲಂಘಿಸಿ 24 ಮೀಟರ್ ಉದ್ದದ ರಸ್ತೆ ನಿರ್ಮಿಸುತ್ತಿದೆ’ ಎಂದು ಆಕ್ಷೇಪಿಸಿ ‘ವೈಟ್ಟ್ಫೀಲ್ಡ್ ರೈಸಿಂಗ್ ಚಾರಿಟಬಲ್ ಟ್ರಸ್ಟ್’ ಹೈಕೋರ್ಟ್ ಮೆಟ್ಟಿಲೇರಿದೆ.
ಈ ಕುರಿತು ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲೆ ಜಯ್ನಾ ಕೊಠಾರಿ, ‘ಈ ರಸ್ತೆ ನಿರ್ಮಾಣ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶಕ್ಕೆ ವಿರುದ್ಧವಾಗಿದೆ ಹಾಗೂ ಕರ್ನಾಟಕ ಕೆರೆ ಸಂರಕ್ಷಣಾ ಮತ್ತು ಅಭಿವೃದ್ಧಿ ಕಾಯ್ದೆ–2014ರ ಉಲ್ಲಂಘನೆಯೂ ಆಗಿದೆ. ಇದರಿಂದ ಸುತ್ತಲಿನ ಜೈವಿಕ ಪರಿಸರಕ್ಕೆ ಧಕ್ಕೆ ಉಂಟಾಗಲಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಮುಂದಿನ ವಿಚಾರಣೆ ವೇಳೆಗೆ ಸಲ್ಲಿಸಿ’ ಎಂದು ಬಿಬಿಎಂಪಿ ಮತ್ತು ಬಿಡಿಎ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿತು.