ಬಾಗಲಕೋಟೆ: ಮಾಜಿ ಸಂಸದ ಜಿ.ಮಾದೇಗೌಡರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳಬೇಕಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕೂಲ ಹವಾಮಾನದಿಂದ ಹೆಲಿಕಾಪ್ಟರ್ ಹಾರಾಟಕ್ಕೆ ತೊಂದರೆಯಾದ ಕಾರಣ ಜಿಲ್ಲೆಯಲ್ಲಿಯೇ ಪ್ರವಾಸ ಮುಂದುವರೆಸಲು ನಿರ್ಧರಿಸಿದ್ದಾರೆ.
ಶಿವಕುಮಾರ್ ಜಿಲ್ಲೆಯಲ್ಲಿ ಭಾನುವಾರ ದಿನವಿಡೀ ನೇಕಾರರು, ಬಂಜಾರ ಸಮುದಾಯದವರೊಂದಿಗೆ ಸಂವಾದದಲ್ಲಿ ಭಾಗವಹಿಸಬೇಕಿತ್ತು.
ಮಾದೇಗೌಡರ ನಿಧನದ ಹಿನ್ನೆಲೆಯಲ್ಲಿ ಜಿಲ್ಲೆಯ ಕಾರ್ಯಕ್ರಮ ರದ್ದುಗೊಳಿಸಿ ಮಂಡ್ಯಕ್ಕೆ ತೆರಳಲು ಸಿದ್ಧರಾಗಿದ್ದರು. ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ಲಭ್ಯವಾಗಲಿಲ್ಲ. ಹೀಗಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸ ಮುಂದುವರಿಸಲಿದ್ದಾರೆ.
ಈ ಬಗ್ಗೆ ವಿಡಿಯೋ ಪ್ರಕಟಣೆ ಬಿಡುಗಡೆ ಮಾಡಿರುವ ಶಿವಕುಮಾರ್, ‘ಮಾದೇಗೌಡರ ಪುತ್ರ ಮಧು ಅವರಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದೇನೆ. ಧೀಮಂತ ನಾಯಕರಾದ ಮಾದೇಗೌಡರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಮಂಡ್ಯ ಹಾಗೂ ಬಾಗಲಕೋಟೆ ಜಿಲ್ಲೆಯ ಅಭಿಮಾನಿಗಳು ಗೊಂದಲಕ್ಕೊಳಗಾಗಬಾರದು’ ಎಂದು ತಿಳಿಸಿದ್ದಾರೆ.