ಬಾಗಲಕೋಟೆ: ‘ಪಂಚಮಸಾಲಿ ಸಮುದಾಯಕ್ಕೆ ಆ.22 ರೊಳಗೆ ಮೀಸಲಾತಿ ಘೋಷಿಸದಿದ್ದರೆ, ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸುತ್ತೇವೆ’ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆ.22ರೊಳಗೆ ವರದಿ ಪಡೆದು, ಮೀಸಲಾತಿ ಬಗ್ಗೆ ತೀರ್ಮಾನ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಅವರೇ ಹೇಳಿದ್ದರು. ಮೀಸಲಾತಿ ಘೋಷಿಸಿದರೆ ಸಮಾಜದಿಂದ ಸನ್ಮಾನಿಸುತ್ತೇವೆ. ಇಲ್ಲದಿದ್ದರೆ, ಆ.23ರಿಂದ ಧರಣಿ ಆರಂಭಿಸುತ್ತೇವೆ’ ಎಂದರು.
‘ಪಂಚಮಸಾಲಿ ಸಮುದಾಯಕ್ಕೆ 2ಎ ಹಾಗೂ ಲಿಂಗಾಯತ ಸಮುದಾಯಕ್ಕೆ ಕೇಂದ್ರದಿಂದ ಒಬಿಸಿ ಮೀಸಲಾತಿ ಸಿಗಬೇಕು ಎಂಬುದು ನಮ್ಮ ಒತ್ತಾಯ.ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ವಿನಯ ಕುಲಕರ್ಣಿ, ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಪ್ರಮುಖರ ನೇತೃತ್ವದಲ್ಲಿ ಧರಣಿ ನಡೆಯಲಿದೆ’ ಎಂದು ಹೇಳಿದರು.