ಅಮೀನಗಡ: ಸಮೀಪದ ಸೂಳೇಭಾವಿ ಗ್ರಾಮದ ಮೊದಲ ವಾರ್ಡ್ನ ಸಾರ್ವಜನಿಕರು ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿಗೆ ಬುಧವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ನಡೆಯಿತು.
ಗ್ರಾಮದ ಕಿಲ್ಲಾ ಓಣಿಯ ಜನರಿಗೆ ಹಲವು ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಹಲವು ಬಾರಿ ಮನವಿ ಮಾಡಿದರೂ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ ಎಂದು ದೂರಿ ಪಂಚಾಯ್ತಿ ಕಾರ್ಯಾಲಯದ ಮುಂದೆ ಕೆಲಕಾಲ ಪ್ರತಿಭಟನೆ ನಡೆಸಿದರು.
ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಇದೆ. ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.
ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಂ.ಎ. ದಖನಿ ಮಾತನಾಡಿ, ಕಿಲ್ಲಾ ಓಣಿಯ ಕೊಳವೆಬಾವಿ ನೀರು ಕಡಿಮೆಯಾಗಿದೆ. ಮಳೆಯ ಅಭಾವದಿಂದ ನೀರಿಲ್ಲ. ಪಂಚಾಯ್ತಿಯಿಂದ ಹಲವು ಬಾರಿ ಸರಿಪಡಿಸಲು ಪ್ರಯತ್ನಿಸಿದ್ದೇವೆ ಎಂದರು.
ವಾರದೊಳಗೆ ನೀರು ಪೂರೈಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.