ಬಾಗಲಕೋಟೆ: ಅಂಗವಿಕಲ ಮಕ್ಕಳಿಗೆ ಸರ್ಕಾರದ ಸೌಲಭ್ಯ, ಶಿಕ್ಷಣ ಪಡೆಯುವಲ್ಲಿ ಪುನರ್ ವಸತಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ. ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆ ವತಿಯಿಂದ ಪುನರ್ವಸತಿ ಕಾರ್ಯಕರ್ತರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಎರಡು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
‘ಸಾಮಾನ್ಯ ಮಕ್ಕಳಂತೆಯೇ ಶಿಕ್ಷಣ, ಸೌಲಭ್ಯಗಳನ್ನು ಪಡೆಯಲು ನೀವೆಲ್ಲರೂ ಕೆಲಸ ಮಾಡುತ್ತಿದ್ದು, ಪ್ರತಿ ಮಗು ಶಿಕ್ಷಣ ಪಡೆಯಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆಯುವುದು ಎಲ್ಲರ ಹಕ್ಕು‘ ಎಂದರು.
ಸರ್ಕಾರದಿಂದ ಸಿಗಬೇಕಾದ ಶಿಕ್ಷಣ ಮತ್ತು ಸರ್ಕಾರಿ ಸೌಲಭ್ಯಗಳಾದ ಯುಡಿಐಡಿ ಕಾರ್ಡ್, ಪೋಷಣಾ ಭತ್ಯೆ, ಸಾಧನ ಸಲಕರಣೆಗಳು, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ತಲುಪಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅಮರೇಶ ನಾಯಕ ಮಾತನಾಡಿ, ಅಂಗವಿಕಲರ ಸೇವೆ ಮಾಡುವುದು ಪುಣ್ಯದ ಕೆಲಸ ಎಂದು ತಿಳಿದು ಕೆಲಸ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿ ಸವಿತಾ ಕಾಳೆ ಮಾತನಾಡಿ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಎಲ್ಲರಿಗೂ ತಲುಪಿಸಬೇಕು. ಯಾವುದವೇ ಮಗು ಶಿಕ್ಷಣ ಮತ್ತು ಸೌಲಭ್ಯಗಳಿಂದ ವಂಚಿತವಾಗಬಾರದು ಎಂದು ಸಲಹೆ ನೀಡಿದರು.
ಬಾಗಲಕೋಟೆ ತಹಶೀಲ್ದಾರ್ ಅಮರೇಶ ಪಮ್ಮಾರ, ರೋಶಿನಿ, ಬಿಂದು ಮರಸಾನಿ, ಅಭಿನ್, ರಿಯಾಜ್ ಉಪಸ್ಥಿತರಿದ್ದರು.