ಕೆರೂರ: ಸರ್ಕಾರದ ವಿವಿಧ ಯೋಜನೆಗಳ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಸೀಪರಮಟ್ಟಿ ಗ್ರಾಮದಲ್ಲಿ ಇಬ್ಬರನ್ನು ಬಂಧಿಸಿ, ವಾಹನ ಸಮೇತ 5.50 ಕ್ವಿಂಟಲ್ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಹುಸೇಬಿ ಬಾವಾಖಾನ, ಸಿದ್ದರಾಯಪ್ಪ ದ್ಯಾವಣ್ಣವರ ಬಂಧಿತರು.
ಬಾದಾಮಿ ತಾಲ್ಲೂಕು ಆಹಾರ ಇಲಾಖೆ ಶಿರಸ್ತೇದಾರ ಜಿ.ಎಸ್. ಸಬ್ಬನೀಸ್ಮತ್ತು ಪಿಎಸ್ಐ ರಾಮಪ್ಪ ಜಲಗೇರಿ ಅವರ ತಂಡ ಈ ಕಾರ್ಯಾಚರಣೆ ನಡೆಸಿದೆ. ಆರೋಪಿತರು ಅನ್ನಭಾಗ್ಯ, ಅಕ್ಷರ ದಾಸೋಹ ಸೇರಿದಂತೆ ವಿವಿಧ ಯೋಜನೆಗಳ ಅಕ್ಕಿಯನ್ನು ಪ್ರತಿ ತಿಂಗಳು ಸಂಗ್ರಹಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಬೆಳಗಾವಿ ಜಿಲ್ಲೆ ರಾಮದುರ್ಗ, ಲೋಕಾಪೂರ, ಕಲಾದಗಿ ಮತ್ತಿತರ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದರು. ಈ ಜಾಲದಲ್ಲಿ ಇನ್ನೂ ಅನೇಕರು ಭಾಗಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ.
ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಯೋಜನೆಯ ಅಕ್ರಮ ಅಕ್ಕಿ ಮಾರಾಟ ದಂಧೆ ವ್ಯಾಪಕವಾಗಿದ್ದು ಜಿಲ್ಲಾ ಮಟ್ಟದ ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳು ಗಮನ ಹರಿಸಿ ಇಂತಹ ಜಾಲಗಳನ್ನು ಪತ್ತೆ ಹಚ್ಚಿಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ. ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.