ಕಲಾದಗಿ: ‘ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಾಂಗದ ಸರ್ವಾಂಗಿಣ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೆಚ್ಚು ಆದ್ಯತೆ ನೀಡಿದೆ’ ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಎಸ್ಸಿ, ಎಸ್ಟಿ ಕಾಂಗ್ರೆಸ್ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈಗಾಗಲೆ ಶೇ. 80ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಾಂಗದ ಜಮೀನು ನೀರಾವರಿಗೆ ಒಳಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದರೆ ಸಂಪೂರ್ಣ ನೀರಾವರಿ ವ್ಯಾಪ್ತಿಗೆ ಒಳಪಡಿಸಲಾಗುವುದು ಎಂದರು.
ಪ್ರತಿ ಗ್ರಾಮದಲ್ಲೂ ಸಿ.ಸಿ.ರಸ್ತೆ, ಸಮುದಾಯ ಭವನ ನಿರ್ಮಾಣ, ಮಕ್ಕಳ ಶಿಕ್ಷಣಕ್ಕಾಗಿ ಉಚಿತ ಬಸ್ಪಾಸ್ ವಿತರಣೆ, ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ, ಅನ್ನ ಭಾಗ್ಯ, ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಮಾತೃಪೂರ್ಣ ಯೋಜನೆ ಜಾರಿಗೆ ತರಲಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ನ ಎಸ್ಸಿ–ಎಸ್ಟಿ ಘಟಕದ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ, ‘ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಸಾಕಷ್ಟು ಯೋಜನೆ ಜಾರಿಗೆ ತಂದಿದೆ. ಸರ್ಕಾರದ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸಿ ಮತ್ತೆ ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕು’ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯ್ತಿ ಸಲೀಂ ಶೇಖ್, ಮುಖಂಡರಾದ ವೆಂಕಣ್ಣ ಬಿರಾದಾರಪಾಟೀಲ, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಪಾಂಡು ಪೊಲೀಸ್, ಮಂಜು ಮಾದರ ಸೇರಿದಂತೆ ಅನೇಕರು ಇದ್ದರು.