ಬಾಗಲಕೋಟೆ: ಜಿಲ್ಲೆಯಲ್ಲಿ ಮಟ್ಕಾ, ಮಾವಾ, ಜೂಜು ಅಡ್ಡೆಗಳ ಮೇಲೆ ದಿಢೀರ್ ದಾಳಿ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅತೀ ಶೀಘ್ರವಾಗಿ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದರು.
ನವನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ಕಾನೂನು ಬಾಹಿರ ಚಟುವಟಿಕೆಗಳು ಜಿಲ್ಲೆಯಲ್ಲಿ ಕಂಡುಬಂದರೆ ಸಾರ್ವಜನಿಕರು ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಇಲ್ಲವೇ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಮಾವಾ ಮಾರಾಟ ಮಾಡುವವರಿಗೆ ಪೊಲೀಸ್ ಸಿಬ್ಬಂದಿಯೇ ಬೆಂಬಲವಾಗಿ ನಿಂತಿದ್ದಾರೆ ಎಂಬ ಆರೋಪ ಕೇಳಿಬರುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮಾಹಿತಿ ಪಡೆದು ಅಕ್ರಮ ಚಟುವಟಿಕೆಗಳಿಗೆ ಬೆಂಬಲ ನೀಡುವ ಪೊಲೀಸ್ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟ್ರ್ಯಾಕ್ಟರ್ ಚಾಲಕರಿಗೆ ಎಚ್ಚರಿಕೆ
ಕಬ್ಬು ಸಾಗಿಸುವ ಟ್ರ್ಯಾಕ್ಟರ್ಗಳನ್ನು ರಸ್ತೆ ಮೇಲೆ ಎಲ್ಲಂದರಲ್ಲಿ ನಿಲ್ಲಿಸುವ, ಓಡಿಸುವ ಹಾಗೂ ಟೇಪ್ ರಿಕಾರ್ಡ್ ಹಾಕಿಕೊಂಡು ಅತಿಯಾದ ಶಬ್ಧ ಮಾಡುವ ಚಾಲಕರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು. ಕಬ್ಬು ಸಾಗಿಸುವ ಪ್ರತಿ ಟ್ರ್ಯಾಕ್ಟರ್ಗಳಿಗೂ ಕಟ್ಟುನಿಟ್ಟಾಗಿ ರಿಪ್ಲೆಕ್ಟರ್, ಇಂಡಿಕೇಟರ್ ಲೈಟ್ ಅಳವಡಿಸಬೇಕು, ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಆಯುರ್ವೇದ ತಪಾಸಣೆ ನಾಳೆ
ಬಾಗಲಕೋಟೆ: ವಿದ್ಯಾಗಿರಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇದೇ 14 ರಂದು ಬೆಳಿಗ್ಗೆ 10 ರಿಂದ ರಾತ್ರಿ 8ರ ವರೆಗೆ ಎಲ್ಲ ತರಹದ ಸಂಧಿನೋವು, ಬಾವು, ಉರಿ ಊತ, ಕುತ್ತಿಗೆ, ಸೊಂಟ, ಬೆನ್ನುನೋವಿನಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಆಯುರ್ವೇದ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.