ಬಳ್ಳಾರಿ: ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜನರಿಗೆ ಸಕಾಲದಲ್ಲಿ ತಲುಪುವಂತೆ ಕ್ರಮವಹಿಸಬೇಕು. ಜನಪರ ಕೆಲಸಗಳು ತಮ್ಮ ಕೆಲಸವೆಂದು ಭಾವಿಸಿ ಆಸಕ್ತಿ ವಹಿಸಬೇಕು ಎಂದು ಬಳ್ಳಾರಿ ಜಿಲ್ಲೆ ನೂತನ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅಧಿಕಾರಿಗಳಿಗೆ ನಿರ್ದೇಶಿಸಿದರು.
ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಮೊದಲ ಸಭೆಯಲ್ಲಿ ನೂತನ ಜಿಲ್ಲಾಧಿಕಾರಿ ಖಡಕ್ ಸೂಚನೆ ರವಾನಿಸಿದರು.
ಪ್ರತಿ ಅಧಿಕಾರಿಗಳು ತಮ್ಮ ಕೆಲಸದಲ್ಲಿ ಬದ್ಧತೆ ತೋರಬೇಕು. ಯೋಜನೆಗಳನ್ನು ವಿಳಂಬ ಮಾಡದೆ ಜನರಿಗೆ ತಲುಪಿಸಬೇಕು. ಆಗ ಮಾತ್ರ ಆಡಳಿತ ಬಗ್ಗೆ ಸಾರ್ವಜನಿಕರಿಂದ ಒಳ್ಳೆಯ ಅಭಿಪ್ರಾಯ ಬರಲಿದೆ ಎಂದರು.
ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಬಿತ್ತನೆ ಬೀಜ, ರಸಗೊಬ್ಬರ, ಬೆಳೆ ವಿಮೆ ಪರಿಹಾರ ಕುರಿತಂತೆ ಮಾಹಿತಿ ಪಡೆದುಕೊಂಡರು. ರೈತರ ಆತ್ಮಹತ್ಯೆ ಸಂಬಂಧಿಸಿದಂತೆ ಪರಿಹಾರ ತಲುಪಿದೆಯೇ ಎಂದು ಕೇಳಿದ ಅವರು, 15 ದಿನಗಳೊಳಗಾಗಿ ಪರಿಹಾರ ಹಣ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಈ ಕುರಿತು ಆಯಾ ತಾಲೂಕು ತಹಶೀಲ್ದಾರರ ಜೊತೆ ಚರ್ಚಿಸಲಾಗುವುದು ಎಂದು ನುಡಿದರು.
ಶಾಲಾ ಮಕ್ಕಳ ಪಠ್ಯಪುಸ್ತಕ, ಸಮವಸ್ತ್ರ, ಶೂ ವಿತರಣೆ ಹಾಗೂ ಶಾಲೆ ಬಿಟ್ಟ ಮಕ್ಕಳ ವಿವರ ಮತ್ತುಇಂಥ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯ ಔಷಧಿಗಳ ದಾಸ್ತಾನು, ಚಿಕಿತ್ಸೆ ವಿವರ ಪಡೆದುಕೊಂಡರು.
ಆರೋಗ್ಯ, ಶಿಕ್ಷಣ ಹಾಗೂ ವಸತಿ ನಿಲಯಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು. ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಮತ್ತು ತಾಯಿ ಕಾರ್ಡ್ ವಿತರಣೆ ಸೌಲಭ್ಯಗಳ ಕುರಿತು ಪ್ರಶ್ನಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಆಗುವಂತೆ ಕ್ರಮ ಕೈಗೊಳ್ಳಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಕ್ಷೇತ್ರ ಭೇಟಿ ನಡೆಸಬೇಕು ಎಂದು ಸೂಚಿಸಿದರು.
ಗೃಹಲಕ್ಷಿ ಯೋಜನೆ ಸಂಬಂಧ ಆಗಸ್ಟ್ 15ರೊಳಗಾಗಿ ನಿಗದಿತ ಗುರಿ ತಲುಪಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಮೀಣರ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಹೆಚ್ಚಿನ ಬಸ್ಗಳನ್ನು ಓಡಿಸುವಂತೆ ಆದೇಶಿಸಿದರು.
ಜಿಲ್ಲೆಯಲ್ಲಿ ಆರೋಗ್ಯ ಕೇಂದ್ರ, ವಸತಿ ನಿಲಯ ಕಟ್ಟಡಕ್ಕಾಗಿ ಸ್ಥಳದ ಕೊರತೆಯಿದ್ದಲ್ಲಿ ಪ್ರಸ್ತಾವನೆ ಸಲ್ಲಿಸಿ, ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಪರಸ್ಪರ ಸಂಪರ್ಕದಲ್ಲಿರಬೇಕು. ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸಬೇಕು ಎಂದು ಸಲಹೆ ಮಾಡಿದರು.
ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ಹಾಗೂ ನನೆಗುದಿಗೆ ಬಿದ್ದಿರುವ ಕಾಮಗಾರಿಗಳ ಪಟ್ಟಿ ಮಾಡಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಜೆಸ್ಕಾಂ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಕುರಿತು ವಿಚಾರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.