‘ಈ ಹಿಂದಿನ ಅಧ್ಯಕ್ಷ ಎಂ.ಪಿ. ರವೀಂದ್ರ ಅವರ ನಿಧನದ ನಂತರ ಒಪ್ಪಂದದಂತೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷನಾಗಿದ್ದೆ. ಆ ಅವಧಿ ಮುಕ್ತಾಯಗೊಂಡಿರುವುದರಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವೆ’ ಎಂದು ಚಂದ್ರಶೇಖರಯ್ಯ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. ಆದರೆ, ಇತ್ತೀಚಿಗಷ್ಟೇ ಬ್ಯಾಂಕಿನ ಚುನಾವಣೆಯಲ್ಲಿ ಗೆದ್ದು, ನಿರ್ದೇಶಕರಾಗಿ ಆಯ್ಕೆಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರಿಗೆ ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಮಾಡಿಕೊಡುವುದಕ್ಕಾಗಿಯೇ ಚಂದ್ರಶೇಖರಯ್ಯ ಅವರ ಮೇಲೆ ಒತ್ತಡ ಇತ್ತು. ಹೀಗಾಗಿಯೇ ಅವರು ರಾಜೀನಾಮೆ ಕೊಟ್ಟಿದ್ದಾರೆ ಎಂಬ ಮಾತುಗಳು ಸಹಕಾರಿ ವಲಯದಲ್ಲಿ ಕೇಳಿ ಬರುತ್ತಿದೆ.