ಹೊಸಪೇಟೆ: ‘ಕಾಂಗ್ರೆಸ್ ಪಕ್ಷವು ದಲಿತರನ್ನು ತನ್ನ ಮತ ಬ್ಯಾಂಕಿಗೆ ಸೀಮಿತಗೊಳಿಸಿದೆ. ಆ ವರ್ಗಕ್ಕೆ ಏನೂ ಮಾಡಿಲ್ಲ’ ಎಂದು ಶಾಸಕ ಬಿ.ಎನ್. ಚಂದ್ರಪ್ಪ ಹೇಳಿದರು.
ವಿಜಯನಗರ ಕ್ಷೇತ್ರದ ಉಪಚುನಾವಣೆ ನಿಮಿತ್ತ ಶುಕ್ರವಾರ ನಗರದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪರಿಶಿಷ್ಟ ಜಾತಿ ಸಭೆ ಉದ್ಘಾಟಿಸಿ ಮಾತನಾಡಿದರು.
‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದಲಿತರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದಲಿತ ಸಮುದಾಯಕ್ಕೆ ಸೇರಿದ ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗಿ ಬಿ.ಎಸ್.ಯಡಿಯೂರಪ್ಪ ದಲಿತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ದಲಿತ ಸಮುದಾಯದ ಗೋವಿಂದ ಕಾರಜೋಳ ಉಪಮುಖ್ಯಮಂತ್ರಿ ಆಗಿದ್ದಾರೆ’ ಎಂದರು.
‘70 ವರ್ಷಗಳಿಂದ ದಲಿತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಆದರೆ, ಅವರ ಏಳಿಗೆಗೆ ಏನೂ ಮಾಡಿಲ್ಲ’ ಎಂದು ಆರೋಪಿಸಿದರು.
ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ಮಾತನಾಡಿ, ‘ಕಾಂಗ್ರೆಸ್ ದಲಿತರ ಹೆಸರಿನಲ್ಲಿ ಕೇವಲ ರಾಜಕಾರಣ ಮಾಡುತ್ತಿದೆ. ಆ ಸಮುದಾಯಕ್ಕೆ ಏನೂ ಮಾಡಿಲ್ಲ’ ಎಂದರು.
ಸಂಸದ ವೈ.ದೇವೇಂದ್ರಪ್ಪ, ಶಾಸಕ ರಾಜೂಗೌಡ, ಕವಿತಾ ಈಶ್ವರ್ ಸಿಂಗ್, ಎಚ್. ಹನುಮಂತಪ್ಪ ಇದ್ದರು.