ಹೊಸಪೇಟೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಬಂಗ್ಲೆ ಮಲ್ಲಿಕಾರ್ಜುನ ಅವರಿಗೆ ಕೊಲೆ ಬೆದರಿಕೆ ಹಾಕಿದವರನ್ನು ಕೂಡಲೇ ಬಂಧಿಸುವಂತೆ ಸಂಘದ ತಾಲ್ಲೂಕು ಘಟಕ ಆಗ್ರಹಿಸಿದೆ.
ಈ ಸಂಬಂಧ ಸಂಘದ ಪದಾಧಿಕಾರಿಗಳು ಸೋಮವಾರ ಉಪ ತಹಶೀಲ್ದಾರ್ ಅಮರನಾಥ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
‘ಬಂಗ್ಲೆ ಅವರು ಇತ್ತೀಚೆಗೆ ಅವರ ಪತ್ರಿಕೆಯಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿರುವ ಅಕ್ರಮದ ಕುರಿತು ವರದಿ ಮಾಡಿದ್ದರು. ಹೀಗಾಗಿ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಬೆದರಿಕೆ ಹಾಕಿರುವವರನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.
ಸಂಘದ ಜಿಲ್ಲಾ ಉಪಾಧ್ಯಕ್ಷ ಗಾಳೆಪ್ಪ, ತಾಲ್ಲೂಕು ಗೌರವ ಅಧ್ಯಕ್ಷ ಟೈಗರ್ ಪಂಪಣ್ಣ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾಕುಬಾಳು, ಉಪಾಧ್ಯಕ್ಷ ಭೀಮಾ ನಾಯ್ಕ, ಸದಸ್ಯರಾದ ಶರಣಪ್ಪ, ರಾಮಜೀ ನಾಯ್ಕ, ಕೆ.ಬಿ. ಖವಾಸ್ ಮನವಿಗೆ ಸಹಿ ಹಾಕಿದ್ದಾರೆ.