ಸೋಮವಾರ, ಮಾರ್ಚ್ 27, 2023
21 °C
ಗ್ರಾಮ ಪಂಚಾಯಿತಿ ಸದಸ್ಯರ ಸ್ವಾಭಿಮಾನಿ ಸಮಾವೇಶ

ಹೊಸಪೇಟೆ: ‘ಅಧಿಕಾರಿಗಳನ್ನು ಪ್ರಶ್ನಿಸಿ ವ್ಯವಸ್ಥೆ ಸರಿಪಡಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟ ವಿಜಯನಗರ ಜಿಲ್ಲಾ ಘಟಕದಿಂದ ಗ್ರಾಮ ಪಂಚಾಯಿತಿ ಸದಸ್ಯರ ಸ್ವಾಭಿಮಾನಿ ಸಮಾವೇಶ ಭಾನುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ನಗರದ ಡಾ. ಪುನೀತ್‌ ರಾಜಕುಮಾರ್‌ ವೃತ್ತದಿಂದ ಪಟೇಲ್‌ ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದ ವರೆಗೆ ರ್‍ಯಾಲಿ ನಡೆಸಿದರು. ಅನಂತರ ನಡೆದ ಸಭಾ ಕಾರ್ಯಕ್ರಮವನ್ನು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ಉದ್ಘಾಟಿಸಿ, ಗ್ರಾಮ ಸ್ವರಾಜ್ಯದ ಆಡಳಿತ ಮತ್ತು ಜನಪ್ರತಿನಿಧಿಗಳ ಜವಾಬ್ದಾರಿ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಪ್ರತಿಯೊಂದನ್ನೂ ಅಧಿಕಾರಿಗಳಿಗೆ ಪ್ರಶ್ನಿಸುವ ಮೂಲಕ ವ್ಯವಸ್ಥೆ ಸರಿಪಡಿಸುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

ಕೆಲವೆಡೆ ಅಧಿಕಾರಿಗಳು ಮದ್ಯವರ್ತಿಗಳು, ವರ್ತಕರಂತೆ ವರ್ತಿಸುತ್ತಿದ್ದಾರೆ. ಕೂಡ್ಲಿಗಿ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ವರ್ತಕರಂತೆ ಕೆಲಸ ನಿರ್ವಹಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ ಬ್ಲೀಚಿಂಗ್ ಪೌಡರ್ ಸರಬರಾಜು ಮಾಡಿದ್ದಾರೆ. ಅವರ ವಿರುದ್ಧ ಮೇಲಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ಆಡಳಿತದಲ್ಲಿ ಅಧಿಕಾರಿಗಳು ಅನಗತ್ಯ ಮೂಗು ತೂರಿಸುವ ಕೆಲಸವನ್ನು ನಿಲ್ಲಿಸಬೇಕು. ಇದೇ ಚಾಳಿ ಮುಂದುವರಿಸಿದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿಜಯನಗರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಲ್ಲಿ ಮಾಡಿದಂತಹ ಅನೇಕ ಕಾಮಗಾರಿಗಳು ಕಳಪೆಯಾಗಿವೆ. ಅವುಗಳನ್ನು ಸರಿಪಡಿಸಬೇಕು. ಯೋಜನೆ ಅನುಷ್ಠಾನದ ಅನುದಾನ ಗ್ರಾಮ ಪಂಚಾಯಿತಿ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ಯಾವುದೇ ಯೋಜನೆಗಳ ಅನುಷ್ಠಾನಕ್ಕೂ ಮುನ್ನ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

ಒಕ್ಕೂಟದ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣಕ್ಕಿ ಲಕ್ಷ್ಮಣ್, ಗ್ರಾಮ ಸ್ವರಾಜ್ಯದ ಹಕ್ಕುಗಳನ್ನು ಮೊಟಕುಗೊಳಿಸುವ ಕೆಲಸಕ್ಕೆ ಯಾರು ಕೈ ಹಾಕಬಾರದು ಎಂದು ಆಗ್ರಹಿಸಿದರು.

ಒಕ್ಕೂಟದ ಸೋಮಪ್ಪ, ಶಶಿಕಲಾ, ಬೃಂದಾ, ಕೃಷ್ಣೇಗೌಡ, ಪಂಪಯ್ಯ, ಪ್ರದೀಪ್ ಪಾಟೀಲ, ಪ್ರಿಯಾಂಕ ಪವಾರ, ನಾಗರಾಜ್, ಲೋಕೇಶ್ ಹೊಳಗುಂದಿ, ವಿಜಯಕುಮಾರಿ ಹಾಜರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.