ಹೊಸಪೇಟೆ (ವಿಜಯನಗರ): ವಿವಿಧ ವಲಯಗಳಲ್ಲಿ ಪ್ರಶಸ್ತಿ ಪುರಸ್ಕೃತರಾದ ಪ್ರಾಧ್ಯಾಪಕರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಸನ್ಮಾನ ನೆರವೇರಿಸಿ ಮಾತನಾಡಿದ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ಪ್ರಶಸ್ತಿ ಮತ್ತು ಪುರಸ್ಕಾರಗಳು ನಮ್ಮ ಕ್ಷೇತ್ರಗಳಲ್ಲಿ ಹೆಚ್ಚಿನ ಕೆಲಸ ಮಾಡಲು ಹುರುಪು ತುಂಬುತ್ತವೆ. ನಮ್ಮಲ್ಲಿ ಆತ್ಮವಿಶ್ವಾಸ ಮತ್ತು ಹೊಸ ಚೈತನ್ಯ ತುಂಬುತ್ತವೆ ಎಂದರು.
ನಮ್ಮ ವಿಶ್ವವಿದ್ಯಾಲಯದ ಅಧ್ಯಾಪಕರು ಶ್ರಮ ಪೂರಕವಾಗಿ ಪ್ರಶಸ್ತಿ ಪಡೆದಿರುವುದು ನಮಗೆ ಹೆಮ್ಮೆಯ ಸಂಗತಿ. ವಿಶ್ವವಿದ್ಯಾಲಯದ ಅಧ್ಯಾಪಕರು ವಿವಿಧ ಕ್ಷೇತ್ರಗಳ ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ನಮ್ಮ ವಿಶ್ವವಿದ್ಯಾಲಯದ ಬೋಧಕೇತರ ಸಿಬ್ಬಂದಿ ಹುಸೇನ್ ಅವರಿಗೆ ಕರ್ನಾಟಕ ಸರ್ಕಾರ ಜಕಣಾಚಾರಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಸಂತಸ ತಂದಿದೆ. ಬರುವ ದಿನಗಳಲ್ಲಿ ಅವರಿಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಎ. ಸುಬ್ಬಣ್ಣ ರೈ, ವಿಶ್ವವಿದ್ಯಾಲಯದಲ್ಲಿ ಅಧ್ಯಯನದ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ವಿ.ವಿ. ಅಧ್ಯಾಪಕರು ಉತ್ತಮ ಕೆಲಸ ಮಾಡಿ ಪ್ರಶಸ್ತಿಗೆ ಪಾತ್ರರಾಗಿರುವುದು ಸಂತಸ ತಂದಿದೆ. ಅವರನ್ನು ಗೌರವಿಸುವುದು ವಿ.ವಿ. ಜವಾಬ್ದಾರಿ ಕೂಡ ಹೌದು ಎಂದು ಹೇಳಿದರು.
ಪ್ರಾಧ್ಯಾಪಕರಾದ ಚಲುವರಾಜು, ಎಫ್.ಟಿ. ಹಳ್ಳಿಕೇರಿ, ಕೆ.ಎಂ. ಮೇತ್ರಿ, ಎ. ಮೋಹನ್ ಕುಂಟಾರ್, ಕೆ. ರವೀಂದ್ರನಾಥ, ಅಮರೇಶ ಯತಗಲ್ ಅವರನ್ನು ಸನ್ಮಾನಿಸಲಾಯಿತು. ವಿ.ವಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.