ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ: ಖಿನ್ನತೆ ನಿವಾರಣೆಗೆ ‘ಟೆಲಿಮನಸ್‌’ ಸಹಾಯವಾಣಿ

ಸಮಸ್ಯೆ ಇದ್ದರೆ 14416ಗೆ ಕರೆ ಮಾಡಿ: ಡಾ. ರಮೇಶ್‌ ಬಾಬು
Published 11 ಡಿಸೆಂಬರ್ 2023, 15:52 IST
Last Updated 11 ಡಿಸೆಂಬರ್ 2023, 15:52 IST
ಅಕ್ಷರ ಗಾತ್ರ

ಬಳ್ಳಾರಿ: ಪ್ರತಿಯೊಬ್ಬ ವ್ಯಕ್ತಿಗೂ ಜೀವನದ ಯಾವುದಾದಾರೂ ಸನ್ನಿವೇಶಗಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ಕಂಡುಬರುವ ಸಾಧ್ಯತೆ ಇದ್ದು, ಅಂಥ ವೇಳೆಯಲ್ಲಿ ಇನ್ನೊಬ್ಬರ ಜತೆ ವಿಷಯ ಹಂಚಿಕೊಬೇಕು. ಸಮಸ್ಯೆ  ಹೆಚ್ಚಾದಾಗ ಮಾನಸಿಕ ತಜ್ಞರ ಸಲಹೆ ಪಡೆಯಬೇಕು ಅಥವಾ ಟೆಲಿಮನಸ್ ಸಹಾಯವಾಣಿ 14416 ಗೆ ಕರೆ ಮಾಡಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶಬಾಬು ಸಲಹೆ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಮಾನಸಿಕ ಕಾರ್ಯಕ್ರಮ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕ್ಷೇತ್ರ ಮಟ್ಟದ ಸಿಬ್ಬಂದಿಯವರಿಗೆ ಮಾನಸಿಕ ಆರೋಗ್ಯದ ನಿರ್ವಹಣೆ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಟೆಲಿಮೆನಸ್ ಎಂಬ 14416 ಉಚಿತ ಸಹಾಯವಾಣಿ ಆರಂಭಿಸಿದ್ದು, ವ್ಯಥೆಗೆ ಒಳಪಟ್ಟವರು, ಪರೀಕ್ಷಾ ಒತ್ತಡಕ್ಕೊಳಗಾದವರು, ಕೌಟುಂಬಿಕ ಸಮಸ್ಯೆಗೊಳಗಾದವರು, ಆತ್ಮಹತ್ಯೆಗೆ ಆಲೋಚನೆ ಮಾಡುವರು, ಮಾದಕ ವಸ್ತು ವ್ಯಸನಿಗಳು, ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿರುವವರು, ಜ್ಞಾಪಕ ಶಕ್ತಿ ತೊಂದರೆ ಉಳ್ಳವರು, ಆರ್ಥಿಕ ಒತ್ತಡದಲ್ಲಿ ಇರುವವರು ಅಥವಾ ಇತರೆ ಯಾವುದೇ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಸಹಾಯವಾಣಿಗೆ ಕರೆ ಮಾಡಬಹುದು ಎಂದರು.

ಕರೆ ಮಾಡಿದವರ ವಿವರ ಗೋಪ್ಯವಾಗಿ ಇಡಲಾಗುವುದು. ಧ್ವನಿಮುದ್ರಣ ಮಾಡುವುದಿಲ್ಲ ಎಂದು ಭರವಸೆ ನೀಡಿದರು.

ಜಿಲ್ಲಾ ಮಾನಸಿಕ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ವಿರೇಂದ್ರ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಮಾನಸಿಕ ಆರೋಗ್ಯ ಸೇವೆಗಳನ್ನು ನೀಡಲು ಜಿಲ್ಲಾಮಟ್ಟದಿಂದ ಮನೋರೋಗ ತಜ್ಞ ಡಾ.ರೋಹನ್ ವನಗುಂದಿ ಅವರ ನೇತೃತ್ವದಲ್ಲಿ ತಿಂಗಳ ಪ್ರತಿ ಮೊದಲ ಮಂಗಳವಾರ ಕ್ರಮವಾಗಿ ಸಿರುಗುಪ್ಪ, ಸಂಡೂರು, ಕಂಪ್ಲಿ, ಕುರುಗೋಡು ಹಾಗೂ ಪ್ರತಿ ತಿಂಗಳ 16ರಂದು ಮೋಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಪ್ತ ಸಮಾಲೋಚನೆ ಸೇವೆ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಇಂದ್ರಾಣಿ, ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT