ಹೊಸಪೇಟೆ (ವಿಜಯನಗರ): ‘ನ. 11ರಂದು ಕನಕದಾಸರು ಹಾಗೂ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ವಿಜೃಂಭಣೆಯಿಂದ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದರು.
ನಗರದಲ್ಲಿ ಸೋಮವಾರ ನಡೆದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನ.11ರಂದು ಬೆಳಿಗ್ಗೆ 9ಕ್ಕೆ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದಿಂದ ಕನಕದಾಸರ ವೃತ್ತದ ವರೆಗೆ ಮೆರವಣಿಗೆ ನಡೆಯಲಿದೆ. ಕಲಾ ತಂಡಗಳು ಪಾಲ್ಗೊಳ್ಳಲಿವೆ. ಕನಕದಾಸರ ವೃತ್ತದಲ್ಲಿಯೇ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಉಪನ್ಯಾಸ ನೀಡಲಾಗುವುದು ಎಂದು ತಿಳಿಸಿದರು.
ಅದೇ ದಿನ ಬೆಳಿಗ್ಗೆ 10.30ಕ್ಕೆ ಚಲುವಾದಿ ಕೇರಿಯಿಂದ ಮದಕರಿ ನಾಯಕ ವೃತ್ತ, ಡಾ.ಪುನೀತ್ ರಾಜಕುಮಾರ್ ವೃತ್ತದಿಂದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ವರೆಗೆ ಮೆರವಣಿಗೆ ಕೈಗೊಳ್ಳಲು ಮುಖಂಡರು ಕೋರಿದರು. ಈ ಕುರಿತು ಎಸ್ಪಿಯವರೊಂದಿಗೆ ಚರ್ಚಿಸಿ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ವಿ.ಪ್ರಕಾಶ, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ನಗರಸಭೆ ಪೌರಾಯುಕ್ತ ಮನೋಹರ್ ನಾಗರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಕೊಟ್ರೇಶ್, ಕುರುಬ ಹಾಗೂ ಚಲುವಾದಿ ಸಮಾಜದ ಮುಖಂಡರು ಇದ್ದರು.