ಹರಪನಹಳ್ಳಿ: ಗ್ಯಾರಂಟಿ ಯೋಜನೆಗಳಿಂದ ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಬಲ ಬಂದಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು.
ತಾಲ್ಲೂಕಿನ ಚಿಗಟೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ 5 ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹಿನ್ನೆಡೆಯಾಗಿದೆ ಎಂದು ಬಹಳ ಜನ ತಪ್ಪು ಅಭಿಪ್ರಾಯ ಹೊಂದಿದ್ದಾರೆ. ಆದರೆ ಈ ಉಚಿತ ಸೌಲಭ್ಯಗಳಿಂದ ರಾಜ್ಯ ಸರ್ಕಾರಕ್ಕೆ ಶಕ್ತಿ ಬಂದಿದೆ ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆಯಿಂದ ನನ್ನ ಕ್ಷೇತ್ರಕ್ಕೆ ₹ 20 ಕೋಟಿ ಅನುದಾನ, ಮುಖ್ಯಮಂತ್ರಿ ಅನುದಾನದಿಂದ ₹ 25 ಕೋಟಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ₹ 5 ಕೋಟಿ ಹಾಗೂ ಸಮಾಜಕಲ್ಯಾಣ ಇಲಾಖೆಯಿಂದ ₹ 2 ಕೋಟಿ ಒಟ್ಟು ₹ 52 ಕೋಟಿ ಅನುದಾನ ಹರಪನಹಳ್ಳಿ ಕ್ಷೇತ್ರದ ಅಭಿವೃದ್ದಿಗೆ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿಂದಲೂ ಸಾಕಷ್ಟು ಅನುದಾನ ತಾಲ್ಲೂಕಿಗೆ ಬಂದಿದೆ. ಕೇವಲ 8 ತಿಂಗಳಲ್ಲಿ ಒಟ್ಟು ನನ್ನ ಕ್ಷೇತ್ರಕ್ಕೆ ₹ 200 ಕೋಟಿಗೂ ಅಧಿಕ ಹಣ ಬಿಡುಗಡೆಯಾಗಿದ್ದು, ಇದರಡಿ ಹಂತ ಹಂತವಾಗಿ ಅಭಿವೃದ್ದಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಮಾಡುವುದಾಗಿ ತಿಳಿಸಿದರು.
ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮಿ, ನಿರುದ್ಯೋಗ ಭತ್ಯೆ ಸೇರಿ 5 ಗ್ಯಾರಂಟಿ ಯೋಜನೆಗಳ ವರದಿಯನ್ನು ವಿವಿಧ ಇಲಾಖೆ ಅಧಿಕಾರಿಗಳು ಮಂಡಿಸಿದರು. ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು, ಇಒ ಪ್ರಕಾಶ್, ಸಿಡಿಪಿಒ ಹರೀಶ್, ಮತ್ತೂರು ಬಸವರಾಜ್ ಇದ್ದರು.