ಹೊಸಪೇಟೆ: ತಾಲ್ಲೂಕು ಆರೋಗ್ಯ ಇಲಾಖೆಯಿಂದ ಶುಕ್ರವಾರ ನಗರದಲ್ಲಿ ವಿಶ್ವ ತಂಬಾಕು ವಿರೋಧಿ ದಿನ ಆಚರಿಸಲಾಯಿತು.
ಹಳೆ ಸರ್ಕಾರಿ ಆಸ್ಪತ್ರೆಯಲ್ಲಿ ತಾಲ್ಲೂಕು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಅಶ್ವಿನ್ ಕೋತಂಬ್ರಿ ಜಾಥಾಗೆ ಚಾಲನೆ ನೀಡಿದರು. ಪ್ರಮುಖ ಮಾರ್ಗಗಳ ಮೂಲಕ ಹಾದು ಹೋದ ಜಾಥಾ ರೋಟರಿ ವೃತ್ತದಲ್ಲಿ ಕೊನೆಗೊಂಡಿತು.
ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ಹೊಂದಿದ್ದ ಫಲಕಗಳನ್ನು ಹಿಡಿದುಕೊಂಡು ಆರೋಗ್ಯ ಇಲಾಖೆ ಮತ್ತು ಆಶಾ ಕಾರ್ಯಕರ್ತೆಯರು ಹೆಜ್ಜೆ ಹಾಕಿದರು.
ಕಾನೂನು ಸೇವೆಗಳ ಪ್ರಾಧಿಕಾರದ ಕರುಣಾನಿಧಿ ಮಾತನಾಡಿ, ‘ತಂಬಾಕು ಸೇವನೆಯಿಂದ ಅನೇಕ ಜನ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ಇದು ಒಳ್ಳೆಯ ಅಭ್ಯಾಸವಲ್ಲ. ಆರೋಗ್ಯಯುತ ಜೀವನ ನಡೆಸಬೇಕಾದರೆ ತಂಬಾಕು ಉತ್ಪನ್ನಗಳ ಸೇವನೆಯಿಂದ ದೂರ ಇರಬೇಕು’ ಎಂದು ಕಿವಿಮಾತು ಹೇಳಿದರು.
ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಆನಂದ ಚವಾಣ್,ಉದ್ಯಮಿ ಶ್ರೀನಿವಾಸರಾವ್, ಇನ್ನರ್ ವೀಲ್ ಅಧ್ಯಕ್ಷೆ ಮೇಘನಾ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್, ಆರೋಗ್ಯ ಶಿಕ್ಷಣ ಅಧಿಕಾರಿ ಎಂ.ಪಿ. ದೊಡ್ಡಮನಿ, ದಂತ ವೈದ್ಯಕೀಯ ಸಂಘದ ವೆಂಕಟೇಶ ಇದ್ದರು.