ಹೊಸಪೇಟೆ(ವಿಜಯನಗರ): ಉತ್ತರ ಪ್ರದೇಶದ ಲಖಿಂಪುರ-ಖೇರಿಯಲ್ಲಿ ಮೃತ ರೈತರ ಕುಟುಂಬದವರನ್ನು ಭೇಟಿಯಾಗಲು ತೆರಳಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ್ ಗಾಂಧಿ ಅವರನ್ನು ಗೃಹಬಂಧನದಲ್ಲಿ ಇರಿಸಿರುವ ಅಲ್ಲಿನ ಸರ್ಕಾರದ ಧೋರಣೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ತಹಶೀಲ್ದಾರ್ ಕಚೇರಿ ಎದುರು ಸೇರಿದ ಕಾರ್ಯಕರ್ತರು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಲಖಿಂಪುರ-ಖೇರಿ ಹಿಂಸಾಚಾರದಲ್ಲಿ ಹತ್ಯೆಯಾದ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಹೊರಟಿದ್ದ ಪ್ರಿಯಾಂಕ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರನ್ನು ಪೊಲೀಸರು ಅವಕಾಶ ಕೊಡದೆ ಮಾರ್ಗಮಧ್ಯೆ ಬಂಧಿಸಿ ಗೃಹಬಂಧನದಲ್ಲಿ ಇರಿಸಿದ್ದು ಸಂವಿಧಾನ ವಿರೋಧಿಯಾಗಿದೆ. ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರೇಡ್–2 ತಹಶೀಲ್ದಾರ್ ಮೇಘನಾ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಒತ್ತಾಯಿಸಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮ್ಮದ್ ಇಮಾಮ್ ನಿಯಾಜಿ, ಮುಖಂಡರಾದ ದೀಪಕ್ ಕುಮಾರ್ ಸಿಂಗ್, ಗುಜ್ಜಲ್ ನಾಗರಾಜ್, ಮುನ್ನಿ, ಶಶಿಧರ್, ಕಾಸಿಂ, ಕುಬೇರ ದಲ್ಲಾಳಿ, ಕೆ.ಗೌಸ್, ಸಿ.ಆರ್.ಭರತ್ ಕುಮಾರ್ ಇದ್ದರು.