ಹೊಸಪೇಟೆಯ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜೊಂದರಲ್ಲೇ 78 ಜನ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಚಿತ್ರದುರ್ಗ, ಮೈಸೂರು, ಚಿಕ್ಕಮಗಳುರು ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಿಂದ ಬಂದು, ಬಾಡಿಗೆ ಮನೆಯಲ್ಲಿದ್ದುಕೊಂಡು ಕೆಲಸ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಮರಿಯಮ್ಮನಹಳ್ಳಿ, ಹರಪನಹಳ್ಳಿ, ಹೂವಿನಹಡಗಲಿ, ಕೊಟ್ಟೂರು ಪದವಿ ಕಾಲೇಜುಗಳಲ್ಲೂ ಇದೇ ಪರಿಸ್ಥಿತಿ ಇದೆ. 500ಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಜಿಲ್ಲೆಯಲ್ಲಿದ್ದಾರೆ. ಹೋದ ವರ್ಷ ಅತಿಥಿ ಉಪನ್ಯಾಸಕರಾಗಿ ಈ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದವರು ನ್ಯಾಯಾಲಯದಿಂದ ಮಧ್ಯಂತರ ಆದೇಶ ತಂದಿರುವುದರಿಂದ ದಶಕಗಳಿಂದ ಕೆಲಸ ಮಾಡುತ್ತಿರುವ ಪದವಿ ಕಾಲೇಜುಗಳ ಹಿರಿಯ ಹಾಗೂ ಸೇವಾ ನಿಯಮಗಳಿಗೆ ತಕ್ಕಂತೆ ಆಯ್ಕೆಯಾದವರು ಅತಂತ್ರರಾಗಿದ್ದಾರೆ.