ಬಳ್ಳಾರಿ: ‘ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿನ ವೈದ್ಯಕೀಯ ಕಾಲೇಜುಗಳಿಗೆ ಮೂಲ ಸೌಕರ್ಯ ಹಾಗೂ ವಿಶೇಷ ಸ್ಥಾನಮಾನ ಕಲ್ಪಿಸಿಕೊಡಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಹೇಳಿದರು.
ಇಲ್ಲಿನ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಶಸ್ತ್ರ ಚಿಕಿತ್ಸೆ ಸಂಕೀರ್ಣ ವಿಭಾಗ, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ, ಕಿಮೋ ಥೆರಪಿ ವಿಭಾಗಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
‘ವಿಮ್ಸ್ ಬಹಳ ಹಳೆಯ ಸಂಸ್ಥೆಯಾಗಿದ್ದು, ಇದರ ಅಭಿವೃದ್ಧಿಗೆ ಸರ್ಕಾರದಿಂದ ವರ್ಷವಾರು ಅನುದಾನ ಒದಗಿಸಲಾಗುತ್ತಿದೆ. ಅನುದಾನದಲ್ಲಿ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ವಿಜಯನಗರ ಜಿಲ್ಲೆಯಲ್ಲಿ ನೂತನ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಉದ್ದೇಶಿಸಲಾಗಿದೆ’ ಎಂದರು.
ವಿಮ್ಸ್ನಲ್ಲಿ ಇತ್ತೀಚಿನ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ, ರೋಸ್ಟರ್ ಮೆರಿಟ್ ಹಾಗೂ ಪದೋನ್ನತಿ ಆಧಾರದ ಮೇಲೆ ನೇಮಿಸುವ ವಿಚಾರ ಸರ್ಕಾರದ ಮಟ್ಟದಲ್ಲಿ ಚರ್ಚೆಯಲ್ಲಿದ್ದು, ಮುಂದಿನ ದಿನಗಳಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುನ್ನ ಆಸ್ಪತ್ರೆಯಲ್ಲಿ ಲಭಿಸುವ ಚಿಕಿತ್ಸೆ ಕುರಿತು ಜನರಿಂದ ಮಾಹಿತಿ ಪಡೆದರು. ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಕುಶಲೋಪರಿ ವಿಚಾರಿಸಿದರು.
ಕೆಎಂಇಆಆರ್ಸಿ ಅನುದಾನದಲ್ಲಿ ₹3,828 ಲಕ್ಷಗಳಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಅಧ್ಯಾಪಕರ ಸಭಾಂಗಣ, 300 ವಿದ್ಯಾರ್ಥಿಗಳ ಸಾಮಥ್ರ್ಯವುಳ್ಳ ಪರೀಕ್ಷಾ ಕೊಠಡಿಗಳ ಕಾಮಗಾರಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.