ಸಿರುಗುಪ್ಪ: ಶಿಕ್ಷಕರನ್ನು ಬಿ.ಎಲ್.ಒ. ಕರ್ತವ್ಯದಿಂದ ಮುಕ್ತಗೊಳಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.
ತಹಶೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಜೆ.ಶ್ರೀಧರ ಮಾತನಾಡಿ, ತಾಲ್ಲೂಕಿನಲ್ಲಿ ಶೇ 60ರಷ್ಟು ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಇನ್ನೂ 25- 30 ಶಾಲೆಗಳಲ್ಲಿ ಒಬ್ಬ ಶಿಕ್ಷಕರು ಇಲ್ಲವಾಗಿದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶೇ 40ರಷ್ಟು ಶಿಕ್ಷಕರು ಭೋದನೆಯನ್ನು ಪೂರ್ಣ ಪ್ರಮಾಣದಲ್ಲಿ ನೀಡಲು ಕಷ್ಟವಾಗಿದೆ ಎಂದರು.
ಶಾಲೆಯಲ್ಲಿ ಮಕ್ಕಳ ದಾಖಲಾತಿ, ಕ್ರೀಡಾಕೂಟ, ಪ್ರತಿಭಾ ಕಾರಂಜಿ ಸೇರಿದಂತೆ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು ಮತ್ತು ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಒಂದು ತಿಂಗಳ ಕಾಲ ಮತದಾರರ ಪಟ್ಟಿ ತಯಾರಿಕೆ, ಮತ್ತು ಮನೆ ಮನೆಗೆ ಬೇಟಿ ಕರ್ತವ್ಯದಲ್ಲಿ ಶಿಕ್ಷಕರು ತೊಡಗಿಕೊಂಡಾಗ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಶಿಕ್ಷಕರನ್ನು ಬಿ.ಎಲ್.ಒ. ಕರ್ತವ್ಯಕ್ಕೆ ನಿಯೋಜಿಸಬಾರದೆಂದು 2018ರಲ್ಲಿ ಶಿಕ್ಷಣ ಇಲಾಖೆಯ ನಿರ್ದೇಶಕರು ಮತ್ತು ಸರ್ವೋಚ್ಚ ನ್ಯಾಯಾಲಯವು ಆದೇಶ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಹೇಳಿಕೆಯನ್ನು ಮನಗಂಡು, ಸರ್ಕಾರ ಮತ್ತು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಪ್ರ.ಕಾರ್ಯದರ್ಶಿ ವೈ.ಹನುಮನಗೌಡ, ಉಪಾಧ್ಯಕ್ಷ ರಾಘವೇಂದ್ರ, ಕಾರ್ಯದರ್ಶಿ ಹನುಮಂತರೆಡ್ಡಿ, ಎನ್.ಎಸ್.ಪಿ. ನೌಕರರ ಸಂಘದ ಉಪಾಧ್ಯಕ್ಷ ಎರ್ರೆಪ್ಪ, ಶಿಕ್ಷಕರಾದ ಪ್ರಮೋದ್ ಕುಮಾರ್, ಹನುಮಂತಪ್ಪ, ನಾಗರತ್ನಮ್ಮ, ರಾಧ, ಶರಣಮ್ಮ ಟಿ.ಸಿದ್ದಯ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.