ಕುರುಗೋಡು: ‘ಜಲಸಂಜೀವಿನಿ ಯೋಜನೆಯಡಿ ಮಣ್ಣು ಮತ್ತು ನೀರು ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೃಷಿ ಹೊಂಡ, ನಾಲಾ ಸ್ವಚ್ಛತೆ, ಕೆರೆ ಹೂಳೆತ್ತುವ ರೈತರ ಜಮೀನುಗಳಲ್ಲಿ ಬದು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ’ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದಯಾನಂದ ಹೇಳಿದರು.
ತಾಲ್ಲೂಕಿನ ಮುಷ್ಟಗಟ್ಟೆ ಗ್ರಾಮದ ಬಳಿ ನಾಲಾ ಸ್ವಚ್ಛತೆ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಅವರು ಪರಿಶೀಲಿಸಿ ಮಾತನಾಡಿದರು.
‘ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಂಗವಿಕಲರಿಗೂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾರ್ಯನಿರ್ವಹಿಸಲು ಯೋಜನೆ ರೂಪಿಸಿದೆ. ಮಹಿಳೆ ಮತ್ತು ಪುರುಷರು ಆಸಕ್ತಿಯಿಂದ ಭಾಗವಹಿಸುತ್ತಿದ್ದಾರೆ’ ಎಂದರು.
ಕೃಷಿ ಅಧಿಕಾರಿ ಎಂ.ದೇವರಾಜ್, ‘ರೈತರು ತಮ್ಮ ಹೊಲಗಳಲ್ಲಿ ಉದ್ಯೋಗಖಾತ್ರಿ ಯೋಜನೆಯಿಂದ ಬದುನಿರ್ಮಾಣ, ಚೆಕ್ಡ್ಯಾಂ ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಎರೆಹುಳಗೊಬ್ಬರ ತೊಟ್ಟಿ ನಿರ್ಮಾಣ ಕಾಮಗಾರಿಗಳನ್ನು ಮಾಡಿಸಿ ಆದಾಯ ಹೆಚ್ಚಿಸಿಕೊಳ್ಳಬಹುದು. ಕಾರ್ಮಿಕರಿಗೆ ತಲಾ ₹316 ಕೂಲಿ ನೀಡಲಾಗುತ್ತಿದೆ’ ಎಂದರು.
ತಾಲ್ಲೂಕಿನ ಮುಷ್ಟಗಟ್ಟೆ ಗ್ರಾಮದಲ್ಲಿ ಜರುಗುತ್ತಿರುವ ನಾಲಾ ಸ್ವಚ್ಛತೆ ಕಾಮಗಾರಿಯಲ್ಲಿ ಶುಕ್ರವಾರ 63 ಮಂದಿ ಕಾರ್ಮಿಕರು ಭಾಗವಹಿಸಿದ್ದರು.