ಕೂಡ್ಲಿಗಿ: ಯಾವುದೇ ಸರ್ಕಾರ ಬರಲಿ ಕೂಡ್ಲಿಗಿ ತಾಲ್ಲೂಕಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಳಿಸುವುದು ನಮ್ಮ ಆದ್ಯತೆ ಎಂದು ಜೆಡಿಎಸ್ ಅಭ್ಯರ್ಥಿ ಎನ್.ಟಿ.ಬೊಮ್ಮಣ್ಣ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಜೆಡಿಎಸ್ಗೆ ಬೆಂಬಲ ಸೂಚಿಸಿದ ರಾಜ್ಯ ರೈತ ಸಂಘದ ಮುಖಂಡರನ್ನು ಉದ್ದೇಶಿಸಿ ಅವರು ಮಾತನಾಡಿದರು.
‘ತಾಲ್ಲೂಕಿನಲ್ಲಿ 10 ವರ್ಷಗಳಿಂದ ಅಭಿವೃದ್ಧಿ ಕೆಲಸಗಳು ನಿಂತಿವೆ. ಗಂಗಾ ಕಲ್ಯಾಣ, ಆಶ್ರಯ ಮನೆಗಳು ಪಡೆಯಲು ಜನ ಹಣ ನೀಡಬೇಕಾಗಿತ್ತು. ಇದರಿಂದ ಜನರು ರೋಸಿ ಹೋಗಿದ್ದು, ಸೌಲಭ್ಯಗಳನ್ನು ಪಡೆಯಲು ಮುಂದೆ ಬಾರದ ಸ್ಥಿತಿ ನಿರ್ಮಾಣವಾಗಿತ್ತು’ ಎಂದು ಹೇಳಿದರು.
‘ಮುಂದಿನ ದಿನಗಳಲ್ಲಿ ಎಲ್ಲ ಕೆಲಸಗಳಿಗೆ ಕಡಿವಾಣ ಬೀಳಲಿದೆ. ತಾಲ್ಲೂಕಿನಲ್ಲಿ ಅನೇಕ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ. ಸರ್ಕಾರ ಸಿಬ್ಬಂದಿ ನೇಮಕ ಮಾಡದೆ ಕಾಲಹರಣ ಮಾಡುತ್ತಿದೆ’ ಎಂದು ದೂರಿದರು.
ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದೇವರ ಮನಿ ಮಹೇಶ್ ಮಾತನಾಡಿ, ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಸರ್ಕಾರ ಆಡಳಿತಕ್ಕೆ ಬರಲಿದೆ. ರೈತರ ಸಮಸ್ಯೆಗಳಿಗೆ ಸ್ಪಂದನೆ ನೀಡಲಿದ್ದಾರೆ ಎಂಬ ವಿಶ್ವಾಸದಿಂದ ಎಲ್ಲ ಕ್ಷೇತ್ರಗಳಲ್ಲಿ ಜೆಡಿಎಸ್ಗೆ ಬೆಂಬಲ ನೀಡಲಾಗುತ್ತಿದೆ ಎಂದರು.
ರೈತ ಸಂಘದ ತಾಲ್ಲುಕು ಅಧ್ಯಕ್ಷಕುರಿ ಶಿವಣ್ಣ, ಜೆಡಿಎಸ್ ಮುಖಂಡ ಬಡೇಲಡಕು ಸತೀಶ್, ಕಾವಲ್ಲಿ ಶಿವಪ್ಪ ನಾಯಕ ಇದ್ದರು.