ಬಳ್ಳಾರಿ: ‘ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ(ಎಲ್ಎಲ್ಸಿ)ಗೆ ಏ.15ರವರೆಗೆ ನೀರು ಹರಿಸಬೇಕೆಂದು ಕೋರಿ ನೀರಾವರಿ ಸಲಹಾ ಸಮಿತಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ಲಾಡ್ ಪತ್ರ ಬರೆದಿದ್ದಾರೆ. ಬೆಳೆ ನಷ್ಟವಾಗುವುದೆಂಬ ಭಯ ಬಿಡಿ’ ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮಪ್ರಸಾದ್ ಮನೋಹರ್ ಸೋಮವಾರ ರೈತರಿಗೆ ಧೈರ್ಯ ತುಂಬಿದರು.
ನೀರು ಹರಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಚಾಗನೂರು ಸಿರಿವಾರ ನೀರಾವರಿ ಭೂ ರಕ್ಷಣಾ ಹೊರಾಟ ಸಮಿತಿ ನೇತೃತ್ವದಲ್ಲಿ ಸಿರುಗುಪ್ಪ ತಾಲ್ಲೂಕಿನ ಕರೂರಿನಿಂದ ಭಾನುವಾರ ಪಾದಯಾತ್ರೆ ನಡೆಸಿದ್ದ ರೈತರು ನಗರಕ್ಕೆ ಬಂದು ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ’ರೈತರ ಪರವಾಗಿ ಜಿಲ್ಲಾಡಳಿತ ನಿಂತಿದೆ. ಹಾಗಾಗಿಯೇ ಸಚಿವರು ಪತ್ರ ಬರೆದು ಮನವಿ ಮಾಡಿದ್ದಾರೆ. ನಾನು ಕೂಡ ಒಮ್ಮೆ ಗಮನ ಸೆಳೆಯುವೆ’ ಎಂದು ಭರವಸೆ ನೀಡಿದರು.
‘ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿದ್ದ ಸಾಲವನ್ನು ರಾಜ್ಯ ಸರ್ಕಾರ ಈಗಾಗಲೇ ಮನ್ನಾ ಮಾಡಿದೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ಸಾಲವನ್ನು ಮನ್ನಾ ಮಾಡುವುದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದು’ ಎಂದು ಅವರು ಸ್ಪಷ್ಟಪಡಿಸಿದರು.
‘ನಗರದ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಶಕ್ಕೆ ನೀಡುವುದಿಲ್ಲ. ಕಾಲೇಜಿನ ಸ್ವಾಯತ್ತತೆಯನ್ನು ಉಳಿಸಲಾಗುವುದು. ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಹಿತ ಕಾಪಾಡಲಾಗುವುದು’ ಎಂದು ಭರವಸೆ ನೀಡಿದರು.
ಕಾಲುವೆಯ ಅಚ್ಚುಕಟ್ಟು ವ್ಯಾಪ್ತಿಯ ಹೊಸಪೇಟೆ, ಬಳ್ಳಾರಿ, ಸಿರುಗುಪ್ಪ ತಾಲ್ಲೂಕಿನ ನೂರಾರು ರೈತರು ಬಿಸಿಲನ್ನು ಲೆಕ್ಕಿಸದೆ ಬೆಳಿಗ್ಗೆಯಿಂದಲೇ ನಡೆದುಬಂದರು.
ಪಾದಯಾತ್ರೆಯು ಮಧ್ಯಾಹ್ನ 3ರ ವೇಳೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೊನೆಗೊಂಡಿತು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.