ಆನೇಕಲ್: ‘ತಾಲ್ಲೂಕಿನಲ್ಲಿ ರೋಟರಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಿಂದ 25 ಲಕ್ಷ ಗಿಡ ನೆಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಈ ಕಾರ್ಯಕ್ರಮವನ್ನು ನರೆಗಾ ಯೋಜನೆಯೊಂದಿಗೆ ಜೋಡಿಸಲಾಗುವುದು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ನಿರ್ದೇಶಕ ಕೆ.ಸಿ.ದೇವರಾಜೇಗೌಡ ತಿಳಿಸಿದರು.
ಅವರು ಪಟ್ಟಣದಲ್ಲಿ ಆನೇಕಲ್ ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಸ್ಮಶಾನ, ಗೋಮಾಳ, ಶಾಲಾ ಆವರಣ ಸೇರಿದಂತೆ ವಿವಿಧ ಸ್ಥಳಗಳನ್ನು ಗುರುತಿಸಲಾಗಿದ್ದು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಜೊತೆಗೂಡಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದರು.
‘ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಪ್ರತಿಯೊಂದು ಮನೆಯ ಮೂಲಮಂತ್ರವಾಗಬೇಕು. ಜನಸಾಮಾನ್ಯರಲ್ಲಿ ಪರಿಸರ ಪ್ರಜ್ಞೆಯನ್ನು ಮೂಡಿಸುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಣೆಗೆ ಸೀಮಿತಗೊಳಿಸದೇ ಜೀವನದ ಭಾಗವಾಗಿಸಿಕೊಳ್ಳಬೇಕು’ ಎಂದರು.
ಆನೇಕಲ್ ಸಬ್ಇನ್ಸ್ಪೆಕ್ಟರ್ ಡಿ.ಮುರಳೀಧರ ಮಾತನಾಡಿ, ‘ಪರಿಸರವನ್ನು ಸಂರಕ್ಷಣೆ ಮಾಡಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಮುಂದಿನ ಪೀಳಿಗೆಗಾಗಿ ಪರಿಸರವನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ. ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು. ವಿದ್ಯಾರ್ಥಿಗಳಲ್ಲಿ ಗಿಡ ಮರಗಳ ಬಗ್ಗೆ ಪ್ರೀತಿ ಬೆಳೆಸಬೇಕು. ಗಿಡಗಳನ್ನು ಮಕ್ಕಳಂತೆ ಬೆಳೆಸಬೇಕು. ನೆಟ್ಟ ಗಿಡವನ್ನು ಸಂರಕ್ಷಿಸಲು ಮರೆಯಬಾರದು. ಅವುಗಳ ಪಾಲನೆ ಅತ್ಯಂತ ಅವಶ್ಯಕ’ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್.ರಾಮಮೂರ್ತಿ, ಎರಿನ್ ಪ್ರತಿಷ್ಠಾನದ ಅಧ್ಯಕ್ಷ ಸಾಯಿಪ್ರಕಾಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಶಿವಣ್ಣ, ರಾಜ್ಯ ಪರಿಷತ್ ಸದಸ್ಯ ಎ.ಶಶಿಕಿರಣ್, ಉಪಾಧ್ಯಕ್ಷರಾದ ರಾಮಪ್ಪ ತಳವಾರ್, ಆರ್.ಶ್ರೀನಿವಾಸ್, ಎಚ್.ಟಿ.ಲಕ್ಷ್ಮೀಪತಿ, ಕಾರ್ಯದರ್ಶಿಗಳಾದ ಎಂ.ಅಮರೇಶ್, ಎಚ್.ಮಂಜುನಾಥ್, ರಾಜ್ಯ ಘಟಕದ ಕಾರ್ಯದರ್ಶಿ ಈರಣ್ಣ ಓಣಿಮನೆ, ಪದಾಧಿಕಾರಿಗಳಾದ ವೆಂಕಟೇಶ್, ಚಂದ್ರಶೇಖರ್, ಸುರೇಶ್, ಎಂ.ಎಂ.ರಾಜೇಶ್, ಎಂ.ಆರ್.ಪ್ರಕಾಶ್, ಮಾಧವಕೃಷ್ಣ, ಎನ್.ಶ್ರೀನಿವಾಸ್, ಶಿಕ್ಷಕರ ಸಂಘದ ಖಜಾಂಚಿ ಟಿ.ವಿ.ಉಮೇಶ್, ಉಪಾಧ್ಯಕ್ಷ ಕೆ.ನಾಗರಾಜು, ಪದಾಧಿಕಾರಿಗಳಾದ ವೆಂಕಟಸ್ವಾಮಿರೆಡ್ಡಿ, ಗಣೇಶ್ ಫಾರ್ಮರ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.