ದೇವನಹಳ್ಳಿ:ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಕಟ್ಟಡವೊಂದರಲ್ಲಿ ನಡೆಯುತ್ತಿದ್ದು ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಆಂಧ್ರ ಮೂಲದ ವ್ಯಕ್ತಿಗಳು ಸೇರಿದಂತೆ 80ಕ್ಕೂ ಹೆಚ್ಚು ಮಂದಿಯನ್ನು ಶನಿವಾರ ವಶಕ್ಕೆ ಪಡೆದಿದ್ದಾರೆ.
ತಾಲ್ಲೂಕಿನ ಕನ್ನಮಂಗಲ ಗೇಟ್ನಲ್ಲಿರುವ ಕಟ್ಟಡವೊಂದರಲ್ಲಿ ಜೂಜು ಅಡ್ಡೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ ಕಟ್ಟಡದಲ್ಲಿ ಜೂಜಾಡುತ್ತಿದ್ದವರನ್ನು ಬಂಧಿಸಿದ್ದಾರೆ.
ಆಂಧ್ರದಿಂದ ಬಂದು ಇಲ್ಲಿ ಜೂಜಾಟದಲ್ಲಿ ತೊಡಗಿಸಿಕೊಂಡಿದ್ದರೂ ಸ್ಥಳೀಯ ಪೊಲೀಸರಿಗೆ ಮಾಹಿತಿ ಇರಲಿಲ್ಲವೇ, ಒಂದು ವೇಳೆ ಮಾಹಿತಿಯಿದ್ದರೂ ತಟಸ್ಥವಾಗಿದ್ದು ಏಕೆ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.